ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ
ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 04, 2022 | 1:02 PM

ದೆಹಲಿ: ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ನೀಡಿರುವ ಹೇಳಿಕೆಯನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಟೀಕಿಸಿದ್ದಾರೆ. ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದ ತುಣುಕನ್ನು ಟ್ವೀಟ್ ಮಾಡಿರುವ ಕಿರಣ್ ರಿಜಿಜು, ‘ಜನಪ್ರಿಯ ಪ್ರಧಾನಿಯನ್ನು ಎಗ್ಗಿಲ್ಲದೆ ಟೀಕಿಸುವ ಇಂಥವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಅಳುತ್ತಿದ್ದಾರೆ. ಅಂಥವರು ಕಾಂಗ್ರೆಸ್​ ಪಕ್ಷವು ದೇಶದ ಮೇಲೆ ಹೇರಿದ ತುರ್ತುಪರಿಸ್ಥಿತಿ ಬಗ್ಗೆಯಾಗಲೀ, ದೇಶದ ಕೆಲ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳ ಬಗ್ಗೆಯಾಗಲೀ ಎಂದಿಗೂ ಮಾತನಾಡುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳು ಸಂದರ್ಶನದಲ್ಲಿ ಮಾತನಾಡುವಾಗ, ‘ಇಂದು ಕೆಲ ಸಂಗತಿಗಳು ತೀರಾ ಕೆಟ್ಟದಾಗಿವೆ. ನಾನು ಸಾರ್ವಜನಿಕ ಸ್ಥಳದಲ್ಲಿ ನಿಂತು ಪ್ರಧಾನಿಯ ಮುಖ ನನಗಿಷ್ಟವಿಲ್ಲ ಎಂದು ಹೇಳಿದರೆ ನನ್ನ ಮೇಲೆ ದಾಳಿಯಾಗಬಹುದು. ಯಾವುದೇ ಕಾರಣ ನೀಡದೇ ನನ್ನನ್ನು ಬಂಧಿಸಿ ಜೈಲಿಗೆ ಅಟ್ಟಬಹುದು. ಈ ಪ್ರವೃತ್ತಿಯನ್ನು ದೇಶದ ಎಲ್ಲ ನಾಗರಿಕರು ವಿರೋಧಿಸುತ್ತಿದ್ದೇವೆ’ ಎಂದು ಹೇಳಿದ್ದರು.

ಈ ಹೇಳಿಕೆ ಖಂಡಿಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಈ ಹೇಳಿಕೆ ನೀಡಿರುವುದು ನಿಜವೇ ಆಗಿದ್ದರೆ, ಅವರು ತಾವು ಸೇವೆ ಸಲ್ಲಿಸಿದ ಸಂಸ್ಥೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದರು.

Published On - 1:01 pm, Sun, 4 September 22