AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಪುತ್ರನ ಜಾಮೀನು ರದ್ದುಪಡಿಸಿದ ಸುಪ್ರೀಂಕೋರ್ಟ್: ಲಖಿಪುರ್ ಖೇರಿ ಹಿಂಸಾಚಾರ ಪ್ರಕರಣ

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರ ಮಗ ಆಶೀಷ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಫೆಬ್ರುವರಿ 10ರಂದು ಜಾಮೀನು ಮಂಜೂರು ಮಾಡಿತ್ತು

ಸಚಿವರ ಪುತ್ರನ ಜಾಮೀನು ರದ್ದುಪಡಿಸಿದ ಸುಪ್ರೀಂಕೋರ್ಟ್: ಲಖಿಪುರ್ ಖೇರಿ ಹಿಂಸಾಚಾರ ಪ್ರಕರಣ
ಆರೋಪಿ ಆಶಿಷ್ ಮಿಶ್ರಾ
TV9 Web
| Edited By: |

Updated on:Apr 18, 2022 | 11:26 AM

Share

ದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಶೀಷ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಪಡಿಸಿದೆ. ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರ ಮಗ ಆಶೀಷ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಫೆಬ್ರುವರಿ 10ರಂದು ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ರದ್ದುಪಡಿಸಿರುವ ಸುಪ್ರೀಂಕೋರ್ಟ್, ಒಂದು ವಾರದೊಳಗೆ ಶರಣಾಗಬೇಕು ಎಂದು ಸೂಚನೆ ನೀಡಿದೆ.

ಉತ್ತರ ಪ್ರದೇಶ ಚುನಾವಣಾ ಪ್ರಚಾರ ಗರಿಗೆದರಿದ್ದ ಸಂದರ್ಭದಲ್ಲಿ, ಅಂದರೆ ಕಳೆದ ಫೆಬ್ರುವರಿ 10ರಂದು ಆಶೀಷ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಅಕ್ಟೋಬರ್ 3, 2021ರಂದು ಲಖಿಂಪುರ್ ಖೇರಿಯಲ್ಲಿ ಮೃತಪಟ್ಟಿದ್ದ ರೈತರ ಕುಟುಂಬಗಳು ಈ ಜಾಮೀನು ಆದೇಶವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದ್ದವು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ‘ಹೈಕೋರ್ಟ್​ ತನ್ನ ತೀರ್ಪಿಗೆ ಅನಗತ್ಯ ಅಂಶಗಳನ್ನು ಆಧಾರವಾಗಿ ಪರಿಗಣಿಸಿದೆ. ಕೆಲ ಮುಖ್ಯ ವಿಷಯಗಳನ್ನು ನಿರ್ಲಕ್ಷಿಸಿದೆ ಎಂದು ಹೇಳಿತ್ತು. ‘ಸಂತ್ರಸ್ತರಿಗೆ ಅವರ ವಾದ ಮಂಡನೆಗೆ ಅವಕಾಶವೇ ಸಿಕ್ಕಿಲ್ಲ ಎಂಬ ಅಂಶವನ್ನು ನಾವು ಗಮನಿಸಿದ್ದೇವೆ. ಇಂಥ ಅಪರಾಧ ಪ್ರಕರಣಗಳ ವಿಚಾರಣೆಯಲ್ಲಿ ಭಾಗಿಯಾಗುವ ಹಕ್ಕು ಸಂತ್ರಸ್ತರಿಗೆ ಇರುತ್ತದೆ’ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್​ ಮಿಶ್ರಾ ಮತ್ತು ಅವರ ಮಗ ಆಶೀಷ್ ಮಿಶ್ರಾ ಅವರ ಬೆಂಗಾವಲು ವಾಹನಗಳ ಸಾಲು ಪ್ರತಿಭಟನಾ ನಿರತರ ರೈತರ ಮೇಲೆ ಹರಿದಿತ್ತು. ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮತ್ತು ಒಬ್ಬ ಪತ್ರಕರ್ತ ಮೃತಪಟ್ಟಿದ್ದರು. ಪ್ರಕರಣದ ತನಿಖೆ ಮತ್ತು ಆರೋಪಿಗಳ ಬಂಧನದ ವಿಚಾರದಲ್ಲಿ ಪೊಲೀಸರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಅನಂತರ ಪೊಲೀಸರು ಆಶೀಷ್ ಮಿಶ್ರಾ ಅವರನ್ನು ಬಂಧಿಸಿದ್ದರು. ಆದರೆ ಆರೋಪಿಗೆ ಅಲಹಾಬಾದ್ ಹೈಕೋರ್ಟ್​ನಲ್ಲಿ ಜಾಮೀನು ಸಿಕ್ಕಿತ್ತು.

ಜಾಮೀನು ಅರ್ಜಿಯನ್ನು ಪ್ರಶ್ನಿಸಿದ್ದ ಸಂತ್ರಸ್ತ ರೈತರ ಕುಟುಂಬಗಳು, ‘ಆರೋಪಿಯು ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆಯಾಗಿದ್ದಾರೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ ಪ್ರಕರಣದ ಸಾಕ್ಷಿಯೊಬ್ಬರ ಮೇಲೆ ಹಲ್ಲೆ ನಡೆದಿತ್ತು’ ಎಂಬುದನ್ನು ಸಂತ್ರಸ್ತರು ಸುಪ್ರೀಂಕೋರ್ಟ್ ಗಮನಕ್ಕೆ ತಂದಿದ್ದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠವು ಜಾಮೀನು ರದ್ದುಪಡಿಸುವ ಆದೇಶ ಹೊರಡಿಸಿತು.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

Published On - 11:06 am, Mon, 18 April 22