ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​

ಪೋಕ್ಸೋ ಕೇಸ್​​ ಸಂಬಂಧ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದರಾಗಿರುವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚವರು, ತನ್ನ ಮಗ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದಾನೆ. ಹೀಗಾಗಿ ಪ್ರಕರಣ ಸಂಬಂಧ ನ್ಯಾಯ ಸಿಗುವ ವಿಶ್ವಾಸವಿದೆ ಎಂದಿದ್ದಾರೆ. ಮತ್ತೊಂದೆಡೆ ಇದೊಂದು ಹನಿ ಟ್ರ್ಯಾಪ್ ಯತ್ನಎಂದು ಅವರ ಪುತ್ರ ಭಗೀರಥ್ ಸಾಯಿ ಗಂಭೀರ ಆರೋಪ ಮಾಡಿದ್ದಾರೆ.

ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​
ಪ್ರಾತಿನಿಧಿಕ ಚಿತ್ರ
Edited By:

Updated on: May 24, 2026 | 7:02 PM

ಹೈದರಾಬಾದ್​​, ಮೇ 17: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು ಹಾಗೂ ಬಿಜೆಪಿ ಸಂಸದರಾಗಿರುವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ತಮ್ಮ ಪುತ್ರನನ್ನು ತನಿಖೆಗೆ ಪೊಲೀಸರಿಗೆ ಒಪ್ಪಿಸಿದ್ದಾಗಿ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದು, 17 ವರ್ಷದ ಬಾಲಕಿ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ 25 ವರ್ಷದ ಭಗೀರಥ್ ಸಾಯಿ ವಿರುದ್ಧ ಪ್ರಕರಣ ದಾಖಲಾಗಿತ್ತು.

‘ಕಾನೂನಿನ ಮುಂದೆ ಎಲ್ಲರೂ ಸಮಾನರು’

ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿರುವ ಬಂಡಿ ಸಂಜಯ್ ಕುಮಾರ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಂಬಿಕೆ ನನ್ನದು ಎಂದು ಹೇಳಿದ್ದಾರೆ. ಕಾನೂನು ಮತ್ತು ನ್ಯಾಯಾಂಗದ ಮೇಲೆ ಅತ್ಯಂತ ಗೌರವದಿಂದ, ನನ್ನ ಪುತ್ರ ಬಂಡಿ ಭಗೀರಥ್ ನಮ್ಮ ವಕೀಲರ ಮೂಲಕ ತೆಲಂಗಾಣ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿದ್ದಾರೆ. ನನ್ನ ಸ್ವಂತ ಮಗನಾಗಲಿ ಅಥವಾ ಸಾಮಾನ್ಯ ನಾಗರಿಕನಾಗಲಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಾನು ಹಿಂದೆಯೂ ಹೇಳಿದ್ದೇನೆ. ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಂತರವಾಗಿ ಹೇಳುತ್ತಿದ್ದಾನೆ. ನಮ್ಮ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಕಾನೂನು ತಜ್ಞರ ಮುಂದೆ ಇಟ್ಟಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಪಕ್ಕದ ರಾಜ್ಯ ಸರ್ಕಾರದಿಂದ ಹೊಸ ಆಫರ್

ಅಲ್ಲದೆ ನ್ಯಾಯ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನ್ಯಾಯ ತಡವಾಗಬಹುದು, ಆದರೆ ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಧ್ಯರಾತ್ರಿ ತನಕ ನಡೆದ ವಿಚಾರಣೆಯಲ್ಲಿ, ತೆಲಂಗಾಣ ಹೈಕೋರ್ಟ್ ಸಾಯಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತ್ತು. ಸಾಯಿ ಪರ ವಕೀಲರು ಪ್ರಕರಣದ ದೂರುದಾರೆಯಾದ ಬಾಲಕಿಯ ತಾಯಿ, ತನ್ನ ಮಗಳು ಕಳೆದ ವರ್ಷದಿಂದ ಸಾಯಿಯೊಂದಿಗೆ ಸಂಬಂಧದಲ್ಲಿದ್ದು, ಅದು ಪರಸ್ಪರ ಸೌಹಾರ್ದಯುತವಾಗಿತ್ತು ಎಂದು ಹೇಳಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ, ಸಂತ್ರಸ್ತೆಯ ಪರ ವಕೀಲರು ಜಾಮೀನು ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ಟಿ. ಮಾಧವಿ ದೇವಿ ಅವರು ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದಿದ್ದರು.

ಹನಿ ಟ್ರ್ಯಾಪ್ ಆರೋಪ

ಇನ್ನು ಇದೊಂದು ಹನಿ ಟ್ರ್ಯಾಪ್ ಯತ್ನಎಂದು ಭಗೀರಥ್ ಸಾಯಿ ಆರೋಪಿಸಿದ್ದಾರೆ. ಬಾಲಕಿ ಹಾಗೂ ಆಕೆಯ ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಈ ಕುರಿತು ತಾವು ಮೊದಲೇ ಪೊಲೀಸರನ್ನು ಸಂಪರ್ಕಿಸಿದ್ದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:34 am, Sun, 17 May 26

Loading...
Unable to load recommendations.
Follow Us