
ಹರಿದ್ವಾರ, ಆಗಸ್ಟ್ 24: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ‘ಒಂದು ದೇಶ, ಒಂದು ಚುನಾವಣೆ’ (One Nation, One Election) ಕುರಿತು ಜಾಗೃತಿ ಮೂಡಿಸಲು ಹರಿದ್ವಾರದ ಸಾಧು-ಸಂತರಲ್ಲಿ ಮನವಿ ಮಾಡಿದ್ದಾರೆ. ‘ಒಂದು ದೇಶ, ಒಂದು ಚುನಾವಣೆ’ ಪರವಾಗಿ ನಿರಂತರವಾಗಿ ಧ್ವನಿ ಎತ್ತಿರುವ ಶಿವರಾಜ್ ಸಿಂಗ್ ಚೌಹಾಣ್, ಪದೇ ಪದೇ ನಡೆಯುವ ಚುನಾವಣೆಗಳು ದೇಶದ ಅಭಿವೃದ್ಧಿಗೆ ದೊಡ್ಡ ತೊಡಕಾಗಿವೆ ಎಂದು ಹೇಳಿದ್ದಾರೆ. ವಿಕಸಿತ ಭಾರತದ ನಿರ್ಮಾಣಕ್ಕೆ ‘ಒಂದು ದೇಶ, ಒಂದು ಚುನಾವಣೆ’ ಅತ್ಯಗತ್ಯ ಎಂದು ಅವರು ಸಾಧು-ಸಂತರ ಸಮ್ಮೇಳನದಲ್ಲಿ ಪ್ರತಿಪಾದಿಸಿದ್ದಾರೆ.
ದೇಶದ ಪ್ರತಿಯೊಬ್ಬ ನಾಗರಿಕನು ಇದಕ್ಕೆ ಬೆಂಬಲವಾಗಿ ನಿಲ್ಲುವಂತಹ ವಾತಾವರಣವನ್ನು ಸೃಷ್ಟಿಸಲು ಮತ್ತು ಸಾರ್ವಜನಿಕರನ್ನು ಈ ಕಡೆಗೆ ಪ್ರೇರೇಪಿಸಲು ಸಂತ ಸಮುದಾಯವನ್ನು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಒತ್ತಾಯಿಸಿದರು. ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಒಟ್ಟಿಗೆ ಚುನಾವಣೆ ನಡೆಸುವುದರಿಂದ ಸಮಯ, ಹಣ ಮತ್ತು ಆಡಳಿತಾತ್ಮಕ ಸಂಪನ್ಮೂಲಗಳು ಉಳಿತಾಯವಾಗುತ್ತವೆ. ಇದರಿಂದ ಸರ್ಕಾರ ಮತ್ತು ಆಡಳಿತ ಯಂತ್ರವು ಅಭಿವೃದ್ಧಿ ಕೆಲಸಗಳ ಮೇಲೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ
ರಾಷ್ಟ್ರಹಿತಕ್ಕಾಗಿ ‘ಒಂದು ದೇಶ, ಒಂದು ಚುನಾವಣೆ’:
‘ಒಂದು ದೇಶ, ಒಂದು ಚುನಾವಣೆ’ ಕುರಿತು ಹರಿದ್ವಾರದಲ್ಲಿ ಆಯೋಜಿಸಲಾಗಿದ್ದ ಸಾಧು-ಸಂತರು ಮತ್ತು ಧಾರ್ಮಿಕ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಪ್ರಧಾನಿ ನರೇಂದ್ರ ಮೋದಿ ಅವರ ಈ ಸಂಕಲ್ಪವು ಯಾವುದೇ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ, ಬದಲಿಗೆ ಸಂಪೂರ್ಣವಾಗಿ ರಾಷ್ಟ್ರಹಿತಕ್ಕೆ ಸಂಬಂಧಿಸಿದ್ದಾಗಿದೆ ಎಂದಿದ್ದಾರೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್ಡಿಎ) ತಾನು ಬಹುಮತ ಹೊಂದಿರುವ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2034ರ ಬದಲಿಗೆ 2029ರಲ್ಲೇ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ. ಈ ವ್ಯವಸ್ಥೆಯನ್ನು 2034ರಲ್ಲಿ ಮೊದಲ ಬಾರಿಗೆ ದೇಶದಲ್ಲಿ ಜಾರಿಗೆ ತರಲು ಸಮಯ ನಿಗದಿಪಡಿಸಲಾಗಿತ್ತು.
ಇದನ್ನೂ ಓದಿ: ಉತ್ತಮ ಆಡಳಿತಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯ; ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸದೀಯ ಸಮಿತಿಗೆ ಅಧಿಕಾರಾವಧಿ ವಿಸ್ತರಣೆ:
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆಯನ್ನು ಪರಿಶೀಲಿಸುತ್ತಿರುವ ಸಂಸತ್ತಿನ ಜಂಟಿ ಸಮಿತಿಗೆ ಚಳಿಗಾಲದ ಅಧಿವೇಶನದ ಅಂತ್ಯದವರೆಗೆ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಿ.ಪಿ. ಚೌಧರಿ ಅವರು ಚಳಿಗಾಲದ ಅಧಿವೇಶನದ ಕೊನೆಯ ವಾರದ ಮೊದಲ ದಿನದವರೆಗೆ ವರದಿ ಸಲ್ಲಿಕೆಯ ಗಡುವನ್ನು ವಿಸ್ತರಿಸುವಂತೆ ನಿರ್ಣಯ ಮಂಡಿಸಿದರು. ಈ ನಿರ್ಣಯವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರದಲ್ಲಿ ಪ್ರಾರಂಭವಾಗಿ ಕ್ರಿಸ್ಮಸ್ಗೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:55 pm, Mon, 24 August 26