Uttarkashi cloudburst: ಉತ್ತರಾಖಂಡ ಪ್ರವಾಹ; ಉತ್ತರಕಾಶಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಶೀಘ್ರ ರಕ್ಷಣಾ ಕಾರ್ಯಾಚರಣೆಗೆ ಆದೇಶ

ಉತ್ತರಾಖಂಡದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ದುರಂತದ ವಿಡಿಯೋ ವೈರಲ್ ಆಗಿದೆ. ಧರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟ ಮತ್ತು ಭೂಕುಸಿತದಲ್ಲಿ 4 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೇ, ಎಲ್ಲ ರೀತಿಯ ಪರಿಹಾರ ವ್ಯವಸ್ಥೆ ಕಲ್ಪಿಸುವಂತೆ ಆದೇಶಿಸಿದ್ದಾರೆ.

Uttarkashi cloudburst: ಉತ್ತರಾಖಂಡ ಪ್ರವಾಹ; ಉತ್ತರಕಾಶಿ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ, ಶೀಘ್ರ ರಕ್ಷಣಾ ಕಾರ್ಯಾಚರಣೆಗೆ ಆದೇಶ
ಪ್ರಧಾನಿ ಮೋದಿ

Updated on: Aug 05, 2025 | 9:18 PM

ಉತ್ತರಕಾಶಿ, ಆಗಸ್ಟ್ 5: ಇಂದು ಮಧ್ಯಾಹ್ನ ಸುಮಾರು 1:45ಕ್ಕೆ ಉತ್ತರಾಖಂಡ ರಾಜ್ಯದ ಉತ್ತರಕಾಶಿಯ (Uttarkashi cloudburst) ಧರಾಲಿ ಗ್ರಾಮದಲ್ಲಿ ಭಾರಿ ಮೇಘಸ್ಫೋಟ ಉಂಟಾಗಿದ್ದರಿಂದ ಆ ಗ್ರಾಮ ಸಂಪೂರ್ಣವಾಗಿ ಕೊಚ್ಚಿಹೋಗಿದೆ. ಜನರು ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ಮನಕಲಕುವಂತಿದೆ. ಇದರ ಬೆನ್ನಲ್ಲೇ ಸುಖಿ ಟಾಪ್​​​ನಲ್ಲಿ (Sukhi Top Flood) ಕೂಡ ಭಾರೀ ಪ್ರವಾಹ ಉಂಟಾಗಿದೆ. ಈ ದಿಢೀರ್ ಪ್ರವಾಹದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಂತಾಪ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಖೀರ್ ಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹವು ಧರಾಲಿಯನ್ನು ಆವರಿಸಿ, ಮನೆಗಳಿಗೆ ಹಾನಿಯನ್ನುಂಟುಮಾಡಿತು. ಇದರಿಂದ ಹಲವಾರು ಮನೆಗಳು, ಹೋಟೆಲ್​ಗಳು ಕೊಚ್ಚಿಹೋಯಿತು. ಗಂಗೋತ್ರಿಗೆ ಹೋಗುವ ಯಾತ್ರಾರ್ಥಿಗಳಿಗೆ ಧರಾಲಿ ಒಂದು ಪ್ರಮುಖ ನಿಲುಗಡೆ ತಾಣವಾಗಿದ್ದು, ಹಲವಾರು ಹೋಟೆಲ್‌ಗಳು, ಹೋಂಸ್ಟೇಗಳು ಮತ್ತು ರೆಸ್ಟೋರೆಂಟ್‌ಗಳನ್ನು ಹೊಂದಿದೆ.


ಇದನ್ನೂ ಓದಿ: Uttarkashi cloudburst: ಉತ್ತರಕಾಶಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹದಿಂದ 4 ಜನ ಸಾವು, 100ಕ್ಕೂ ಹೆಚ್ಚು ಮಂದಿ ನಾಪತ್ತೆ

ಪ್ರಧಾನಿ ನರೇಂದ್ರ ಮೋದಿ ಅವರು ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದು, ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲು ಮುಖ್ಯಮಂತ್ರಿ ಧಾಮಿ ಅವರೊಂದಿಗೆ ಮಾತನಾಡಿದ್ದಾರೆ. ಈ ಬಗ್ಗೆ ಹಿಂದಿಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, “ಉತ್ತರಕಾಶಿಯ ಧರಾಲಿಯಲ್ಲಿ ಸಂಭವಿಸಿದ ದುರಂತದಿಂದ ಹಾನಿಗೊಳಗಾದವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಅವಶೇಷಗಳಡಿ ಸಿಲುಕಿದವರು ಸುರಕ್ಷಿತವಾಗಿರಲಿ ಎಂದು ನಾನು ಬಯಸುತ್ತೇನೆ. ನಾನು ಮುಖ್ಯಮಂತ್ರಿ ಪುಷ್ಕರ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಪರಿಹಾರ ಮತ್ತು ರಕ್ಷಣಾ ತಂಡಗಳು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ. ಜನರಿಗೆ ಸಹಾಯ ತಲುಪಲು ಎಲ್ಲ ಪ್ರಯತ್ನವನ್ನು ಮಾಡಲಾಗುತ್ತಿದೆ” ಎಂದಿದ್ದಾರೆ.


ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ “ಉತ್ತರಕಾಶಿಯಲ್ಲಿ (ಉತ್ತರಾಖಂಡ) ಉಂಟಾದ ದಿಢೀರ್ ಪ್ರವಾಹದಿಂದ ಉಂಟಾದ ವಿನಾಶದ ದೃಶ್ಯಗಳನ್ನು ನೋಡುತ್ತಿದ್ದೇನೆ. ದುರಂತದಿಂದ ಹಾನಿಗೊಳಗಾದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ, ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ” ಎಂದು ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಉತ್ತರಕಾಶಿಯಲ್ಲಿ 2ನೇ ಮೇಘಸ್ಫೋಟ; ಸುಖಿ ಟಾಪ್ ಬಳಿ ಉಂಟಾದ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ

ಉತ್ತರಕಾಶಿಯ ಪ್ರವಾಹ ಘಟನೆಯ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. “ಐಟಿಬಿಪಿಯ ಮೂರು ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿದೆ, ಜೊತೆಗೆ 4 ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸಲಾಗಿದೆ. ಅವು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಶೀಘ್ರದಲ್ಲೇ ಸ್ಥಳಕ್ಕೆ ತಲುಪಲಿವೆ” ಎಂದು ಅವರು ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:57 pm, Tue, 5 August 25