ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ; ಸುದರ್ಶನ್ ರೆಡ್ಡಿ ವಿರುದ್ಧ 152 ಮತಗಳ ಗೆಲುವು

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಅವರು ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಒಟ್ಟು 452 ಮತಗಳನ್ನು ಪಡೆದರು. ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯ ಮೂಲಕ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ನಿರ್ಣಾಯಕ ಗೆಲುವು ಸಿಕ್ಕಿದೆ.

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ; ಸುದರ್ಶನ್ ರೆಡ್ಡಿ ವಿರುದ್ಧ 152 ಮತಗಳ ಗೆಲುವು
Radhakrishnan With Pm Modi

Updated on: Sep 09, 2025 | 8:21 PM

ನವದೆಹಲಿ, ಸೆಪ್ಟೆಂಬರ್ 9: ಭಾರತದ ನೂತನ ಉಪರಾಷ್ಟ್ರಪತಿಯಾಗಿ (Vice President Election) ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ (CP Radhakrishnan) ಆಯ್ಕೆಯಾಗಿದ್ದಾರೆ. ಎನ್‌ಡಿಎ ನಾಮನಿರ್ದೇಶಿತರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಸ್ಪಷ್ಟವಾಗಿ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ. ಇವರ ಗೆಲುವಿನ ಅಂತರ 152 ಮತಗಳು.

ಉಪರಾಷ್ಟ್ರಪತಿ ಚುನಾವಣೆ ಇಂದು ಮುಕ್ತಾಯಗೊಂಡಿತು. ಮೊದಲು ಎನ್​ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸಲಾಯಿತು. ತಮ್ಮ ಅಭ್ಯರ್ಥಿಗೆ ಬೆಂಬಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಮನವಿ ಮಾಡಿದ್ದರು. ಆದರೆ, ಇಂಡಿಯಾ ಬಣದ ಜಂಟಿ ಅಭ್ಯರ್ಥಿಯಾಗಿ ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗಿತ್ತು. ಉಪರಾಷ್ಟ್ರಪತಿ ಚುನಾವಣೆಗಳ ಮತದಾನ ಇಂದು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಯಿತು. ಮತ ಎಣಿಕೆ ಕಾರ್ಯ ಶೀಘ್ರದಲ್ಲೇ ಆರಂಭವಾಯಿತು. ರಾಧಾಕೃಷ್ಣನ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ), ತೆಲುಗು ದೇಶಂ ಪಕ್ಷ (ಟಿಡಿಪಿ), ಜನತಾದಳ ಯುನೈಟೆಡ್ (ಜೆಡಿಯು), ಶಿವಸೇನೆ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಅಸ್ಸಾಂ ಗಣ ಪರಿಷತ್ (ಎಜಿಪಿ), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ), ಜನತಾದಳ ಜಾತ್ಯತೀತ (ಜೆಡಿಎಸ್) ಮತ್ತು ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸೇರಿದಂತೆ ಇತರರು ಬೆಂಬಲಿಸಿದರು. ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಕೂಡ ರಾಧಾಕೃಷ್ಣನ್ ಪರವಾಗಿ ಮತ ಚಲಾಯಿಸಿತು.


ಇದನ್ನೂ ಓದಿ: India Vice President Election: ಭಾರತದ ಉಪರಾಷ್ಟ್ರಪತಿ ಚುನಾವಣೆ; ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮತ್ತೊಂದೆಡೆ, ಸುದರ್ಶನ್ ರೆಡ್ಡಿ ಅವರಿಗೆ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಸಮಾಜವಾದಿ ಪಕ್ಷ (ಎಸ್‌ಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಮ್ ಆದ್ಮಿ ಪಕ್ಷ (ಎಎಪಿ), ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮತ್ತು ಎಡ ಪಕ್ಷಗಳು ಸೇರಿದಂತೆ ಇತರ ಪಕ್ಷಗಳು ಬೆಂಬಲ ನೀಡಿದವು.

ಬಿಜು ಜನತಾದಳ (ಬಿಜೆಡಿ), ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸೇರಿದಂತೆ ಹಲವಾರು ಪಕ್ಷಗಳು ಮತದಾನದಿಂದ ದೂರ ಉಳಿದವು. ಸಿ.ಪಿ ರಾಧಾಕೃಷ್ಣನ್ 437 ಮತಗಳನ್ನು ಪಡೆಯುವ ನಿರೀಕ್ಷೆಯಿತ್ತು, ಆದರೆ 452 ಮತಗಳನ್ನು ಪಡೆದರು.


ಸಿ.ಪಿ. ರಾಧಾಕೃಷ್ಣನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.


ಜುಲೈ 21 ರಂದು ಜಗದೀಪ್ ಧನ್ಖರ್ ಅವರ ದಿಢೀರ್ ರಾಜೀನಾಮೆಯಿಂದಾಗಿ ಉಪರಾಷ್ಟ್ರಪತಿ ಚುನಾವಣೆ ಅನಿವಾರ್ಯವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:54 pm, Tue, 9 September 25