Karur Tragedy: ಮಧ್ಯರಾತ್ರಿಯೇ ಕರೂರ್​ಗೆ ಸಿಎಂ ಭೇಟಿ; ಯಾವ ರ‍್ಯಾಲಿಯಲ್ಲೂ ಇಷ್ಟು ಜನ ಬಲಿಯಾಗಿರಲಿಲ್ಲ ಎಂದ ಸ್ಟಾಲಿನ್

Vijay Rally Stampede: ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಶನಿವಾರ ತಮಿಳುನಾಡಿನ ಕರೂರ್​​ನಲ್ಲಿ ಪ್ರಚಾರ ರ‍್ಯಾಲಿ ನಡೆಸುತ್ತಿದ್ದಾಗ ಕಾಲ್ತುಳಿತ ಉಂಟಾಗಿ 39 ಜನ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ನಿನ್ನೆ ಮಧ್ಯರಾತ್ರಿಯೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಭೇಟಿ ನೀಡಿದ್ದಾರೆ. ಈ ವೇಳೆ ಮೃತರ ಕುಟುಂಬಸ್ಥರನ್ನು ಭೇಟಿಯಾದ ಸ್ಟಾಲಿನ್ ಅವರಿಗೆ ಸಾಂತ್ವನ ಹೇಳಿದರು. ನನ್ನ ಜೀವನದಲ್ಲಿ ರಾಜಕೀಯ ರ್ಯಾಲಿಯೊಂದರಲ್ಲಿ ಇಷ್ಟು ಜನರು ಪ್ರಾಣ ಕಳೆದುಕೊಂಡಿದ್ದನ್ನು ನೀಡಿರಲಿಲ್ಲ, ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

Karur Tragedy: ಮಧ್ಯರಾತ್ರಿಯೇ ಕರೂರ್​ಗೆ ಸಿಎಂ ಭೇಟಿ; ಯಾವ ರ‍್ಯಾಲಿಯಲ್ಲೂ ಇಷ್ಟು ಜನ ಬಲಿಯಾಗಿರಲಿಲ್ಲ ಎಂದ ಸ್ಟಾಲಿನ್
Mk Stalin In Karur

Updated on: Sep 28, 2025 | 8:55 AM

ಕರೂರ್, ಸೆಪ್ಟೆಂಬರ್ 28: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ (Vijay Rally) ಪ್ರಚಾರ ರ‍್ಯಾಲಿಯನ್ನು ಆಯೋಜಿಸಿದ್ದರು. ಈ ವೇಳೆ ವಿಜಯ್​ನನ್ನು ನೋಡಲು ಹತ್ತಾರು ಸಾವಿರ ಜನ ಸೇರಿದ್ದರು. ವಿಜಯ್ ಭಾಷಣ ಆರಂಭಿಸುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಹಲವು ಜನ ಮೂರ್ಛೆ ತಪ್ಪಿದ್ದರು. ತಕ್ಷಣ ಅವರನ್ನು ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಜಯ್ ಕೂಡ ಅರ್ಧದಲ್ಲೇ ಭಾಷಣ ಮುಗಿಸಿ ಆ ಸ್ಥಳದಿಂದ ಹೊರಟಿದ್ದರು. ಕಾಲ್ತುಳಿತದಿಂದ ಇದುವರೆಗೂ ಚಿಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ 39 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ. ನಿನ್ನೆ ಮಧ್ಯರಾತ್ರಿಯೇ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಕರೂರಿನ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದು, ಈ ಘಟನೆಯನ್ನು ಅತ್ಯಂತ ಭಯಾನಕ ಎಂದಿದ್ದಾರೆ. ಕಾಲ್ತುಳಿತದ ಕುರಿತು ಮಾತನಾಡಿದ ಅವರು, “ಇದುವರೆಗೆ 39 ಜನರು ಸಾವನ್ನಪ್ಪಿದ್ದಾರೆ. ನಮ್ಮ ರಾಜ್ಯದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ಜನರು ಪ್ರಾಣ ಕಳೆದುಕೊಂಡಿಲ್ಲ. ಭವಿಷ್ಯದಲ್ಲಿ ಇಂತಹ ದುರಂತ ಎಂದಿಗೂ ಸಂಭವಿಸಬಾರದು. ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ: ತನ್ನದೇ ರ್ಯಾಲಿಯಲ್ಲಿ 31 ಜನ ಮೃತಪಟ್ಟರೂ ವಿಮಾನ ಹತ್ತಿ ಹೊರಟ ನಟ ವಿಜಯ್

“ಪ್ರಾಣ ಕಳೆದುಕೊಂಡವರಿಗೆ ನಾನು ಭಾರವಾದ ಹೃದಯದಿಂದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸುವಂತೆ ನಾನು ಆದೇಶಿಸಿದ್ದೇನೆ” ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 am, Sun, 28 September 25