ವಯನಾಡು ಆನೆ ದಾಳಿ ಪ್ರಕರಣ: ಕರ್ನಾಟಕದ ಪರಿಹಾರ ನಮಗೆ ಬೇಡ, ಸಂತ್ರಸ್ತನ ಕುಟುಂಬದವರು ಹೀಗಂದಿದ್ದೇಕೆ?

Wayanad Elephant Attack: ವಯನಾಡಿನ ಆನೆ ದಾಳಿ ಸಂತ್ರಸ್ತನ ಕುಟುಂಬದವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದು ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಇದೀಗ ಮೃತ ವ್ಯಕ್ತಿ ಪ್ರಜೀಶ್​ ಕುಟುಂಬದವರು ಕರ್ನಾಟಕ ಸರ್ಕಾರದ ಪರಿಹಾರ ನಮಗೆ ಬೇಡ ಎಂದು ಹೇಳಿದ್ದಾರೆ.

ವಯನಾಡು ಆನೆ ದಾಳಿ ಪ್ರಕರಣ: ಕರ್ನಾಟಕದ ಪರಿಹಾರ ನಮಗೆ ಬೇಡ, ಸಂತ್ರಸ್ತನ ಕುಟುಂಬದವರು ಹೀಗಂದಿದ್ದೇಕೆ?
ಸಾಂದರ್ಭಿಕ ಚಿತ್ರ

Updated on: Feb 27, 2024 | 2:32 PM

ವಯನಾಡ್, ಫೆಬ್ರವರಿ 27: ಕೇರಳದ ವಯನಾಡಿನಲ್ಲಿ (Wayanad) ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಕರ್ನಾಟಕ ಸರ್ಕಾರ (Karnataka Government) ಘೋಷಿಸಿರುವ 15 ಲಕ್ಷ ರೂಪಾಯಿ ಪರಿಹಾರವನ್ನು ತಿರಸ್ಕರಿಸಿದ್ದಾರೆ. ಕರ್ನಾಟಕ ಸರ್ಕಾರ ಪರಿಹಾರ ನೀಡುತ್ತಿರುವುದಕ್ಕೆ ಬಿಜೆಪಿ (BJP) ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಈ ನಿರ್ಧಾರಕ್ಕೆ ಅವರು ಬಂದಿದ್ದಾರೆ. ವಯನಾಡಿನ ಆನೆ ದಾಳಿ ಸಂತ್ರಸ್ತ ಪ್ರಜೀಶ್​​ನ ಕುಟುಂಬದವರು, ಕರ್ನಾಟಕದ ಪರಿಹಾರದ ಮೊತ್ತ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಫೆಬ್ರವರಿ 10ರಂದು ಪ್ರಜೇಶ್ ಆನೆ ದಾಳಿಗೆ ಬಲಿಯಾಗಿದ್ದರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಕ್ಷೇತ್ರವಾದ ವಯನಾಡಿನಲ್ಲಿ ವ್ಯಕ್ತಿಯು ಆನೆ ದಾಳಿಗೆ ಬಲಿಯಾಗಿರುವ ಕಾರಣ ಕಾಂಗ್ರೆಸ್ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ರಾಹುಲ್ ಗಾಂಧಿ ಅವರನ್ನು ಮೆಚ್ಚಿಸುವುದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಪ್ರಜೀಶ್ ಆನೆ ದಾಳಿಗೆ ಬಲಿಯಾದ ಸಂದರ್ಭದಲ್ಲಿ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗಿದ್ದ ರಾಹುಲ್ ಗಾಂಧಿ ಅರ್ಧದಲ್ಲೇ ಯಾತ್ರೆ ಮೊಟಕುಗೊಳಿಸಿ ವಯನಾಡಿಗೆ ತೆರಳಿದ್ದರು. ಪ್ರಜೀಶ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದರು. ಇದಾದ ಬೆನ್ನಲ್ಲೇ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪರಿಹಾರ ಘೋಷಣೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ಕ್ರಮ ಕೈಗೊಂಡಿದ್ದಾಗಿ ಖಂಡ್ರೆ ಹೇಳಿದ್ದರು.

ಕೇರಳದ ವ್ಯಕ್ತಿಗೆ ಪರಿಹಾರ ಘೋಷಣೆ ಮಾಡಿದ್ದೇಕೆ ಕರ್ನಾಟಕ?

2023 ರ ನವೆಂಬರ್ 30 ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ದಂತರಹಿತ ಗಂಡು ಆನೆಯನ್ನು ಸೆರೆಹಿಡಿಯಲಾಗಿತ್ತು. ಅದನ್ನು ಬಂಡೀಪುರ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಎರಡು ತಿಂಗಳ ನಂತರ ಆ ಆನೆಯು ಕೇರಳದ ವಯನಾಡ್ ಜಿಲ್ಲೆಗೆ ದಾರಿ ತಪ್ಪಿ ತೆರಳಿರುವುದು ಗೊತ್ತಾಗಿತ್ತು. ಫೆಬ್ರವರಿ 10 ರಂದು ಕೇರಳದ ವಯನಾಡ್ ಜಿಲ್ಲೆಯಲ್ಲಿ ಆನೆಯ ದಾಳಿಗೆ ಪ್ರಜೀಶ್ ಸಾವನ್ನಪ್ಪಿದ್ದರು. ಇದು ಕರ್ನಾಟಕದಿಂದ ತೆರಳಿದ ಆನೆಯಿಂದ ಸಂಭವಿಸಿದ್ದು, ಮೃತ ವ್ಯಕ್ತಿಗೆ ಪರಿಹಾರ ನೀಡಬೇಕು ಎಂಬ ಮನವಿ ಸಲ್ಲಿಕೆಯಾಗಿತ್ತು. ಇದರಂತೆ, ಅರಣ್ಯ ಸಚಿವ ಖಂಡ್ರೆ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಪರಿಹಾರ ನೀಡುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಆನೆ ದಾಳಿಗೆ ಬಲಿಯಾದ ವಯನಾಡ್ ವ್ಯಕ್ತಿಗೆ ಕರ್ನಾಟಕದ ಪರಿಹಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಆದರೆ, ಕರ್ನಾಟಕ ಸರ್ಕಾರದ ಈ ನಡೆಯು ಬಹಳಷ್ಟು ಟೀಕೆಗೆ ಗುರಿಯಾಗಿತ್ತು. ಪ್ರತಿಪಕ್ಷ ಬಿಜೆಪಿ ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು. ಮಾನವೀಯ ನೆಲೆಯಲ್ಲಿ ಬೇಕಾದರೆ ಕಾಂಗ್ರೆಸ್ ಪಕ್ಷ ಕೇರಳದ ವ್ಯಕ್ತಿಯ ಕುಟುಂಬದವರಿಗೆ ಪರಿಹಾರ ನೀಡಲಿ. ಆದರೆ ರಾಜ್ಯದ ತೆರಿಗೆದಾರರ ಹಣವನ್ನು ಈ ರೀತಿ ವಿನಿಯೋಗಿಸುವುದು ಸರಿಯಲ್ಲ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us