ನಮ್ಮ ವಿರೋಧ ಮಹಿಳಾ ಮೀಸಲಾತಿಗಲ್ಲ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಾವು ಒಪ್ಪುತ್ತೇವೆ. ಆದರೆ, ಕೇಂದ್ರ ಸರ್ಕಾರವು ಅದನ್ನು ಕ್ಷೇತ್ರ ಪುನರ್ವಿಂಗಡಣೆಯ ಮೂಲಕ ಜಾರಿಗೆ ತರುತ್ತಿರುವ ವಿಧಾನ ತಪ್ಪು. ಇದು ರಾಜಕೀಯ ಪ್ರೇರಿತವಾಗಿದೆ. ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಇದರ ವಿರುದ್ಧ ಹೋರಾಡುತ್ತವೆ ಎಂದು ಕಾಂಗ್ರೆಸ್ ಘೋಷಿಸಿದೆ. ವಿರೋಧ ಪಕ್ಷಗಳ ಸಭೆಯ ನಂತರ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ನಾವು ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸುತ್ತೇವೆ ಆದರೆ ಸರ್ಕಾರದ ವಿಧಾನವನ್ನು ವಿರೋಧಿಸುತ್ತೇವೆ ಎಂದಿದ್ದಾರೆ.

ನವದೆಹಲಿ, ಏಪ್ರಿಲ್ 15: ಹಲವಾರು ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿನ ಕ್ಷೇತ್ರ ಪುನರ್ವಿಂಗಡಣೆ ನಿಬಂಧನೆಗಳ ವಿರುದ್ಧ ಒಗ್ಗಟ್ಟಿನಿಂದ ಮತ ಚಲಾಯಿಸಲು ನಿರ್ಧರಿಸಿವೆ. ಆದರೆ ಮಹಿಳಾ ಮೀಸಲಾತಿಯನ್ನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ನಮ್ಮ ವಿರೋಧ ಕೇಂದ್ರ ಸರ್ಕಾರ ಮಸೂದೆಯನ್ನು ಜಾರಿಗೆ ತರುತ್ತಿರುವ ವಿಧಾನಕ್ಕೇ ವಿನಃ ಮಹಿಳಾ ಮೀಸಲಾತಿಗಲ್ಲ ಎಂದಿದ್ದಾರೆ.
ಆಮ್ ಆದ್ಮಿ ಪಕ್ಷ (ಎಎಪಿ) ಹೊರತುಪಡಿಸಿ, ಇಂಡಿಯಾ ಬಣದ ಹಲವಾರು ಪಕ್ಷಗಳ ನಾಯಕರು ಇಂದು ದೆಹಲಿಯ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿದ್ದರು. ಗುರುವಾರದಿಂದ ಪ್ರಾರಂಭವಾಗುವ ಮೂರು ದಿನಗಳ ವಿಶೇಷ ಸಂಸತ್ತಿನ ಅಧಿವೇಶನದಲ್ಲಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ಸಭೆ ನಡೆಸಲಾಯಿತು.
ಈ ಸಭೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ನಾವೆಲ್ಲರೂ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿದ್ದೇವೆ, ಆದರೆ ಅದನ್ನು ತರುವ ವಿಧಾನಕ್ಕೆ ನಮ್ಮ ವಿರೋಧ ಇದೆ. ಇದು ರಾಜಕೀಯ ಪ್ರೇರಿತ ನಡೆಯಾಗಿದೆ. ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಮತ್ತು ನಿಗ್ರಹಿಸಲು, ಸರ್ಕಾರ ಈ ರೀತಿ ಮಾಡುತ್ತಿದೆ. ನಾವು ನಿರಂತರವಾಗಿ ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತಿದ್ದೇವೆ. ಅಂಗೀಕರಿಸಲಾದ ಹಿಂದಿನ ತಿದ್ದುಪಡಿಯನ್ನು ಜಾರಿಗೆ ತರಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ಬಿಜೆಪಿ ನೇತೃತ್ವದ ಸರ್ಕಾರ ಸೀಮಾ ನಿರ್ಣಯದೊಂದಿಗೆ ತಂತ್ರಗಳನ್ನು ಆಡುತ್ತಿದ್ದಾರೆ. ಆದ್ದರಿಂದ, ಈ ಮಸೂದೆಯನ್ನು ವಿರೋಧಿಸಲು ಎಲ್ಲಾ ಪಕ್ಷಗಳು ಒಗ್ಗಟ್ಟಿನಿಂದ ನಿರ್ಧಾರ ತೆಗೆದುಕೊಂಡಿವೆ” ಎಂದು ಸಭೆಯ ನಂತರ ಖರ್ಗೆ ಹೇಳಿದ್ದಾರೆ.
ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಾತನಾಡಿ, ಸೀಮಾ ನಿರ್ಣಯ ಆಡಳಿತ ಪಕ್ಷಕ್ಕೆ ಬಹುಮತವನ್ನು ಗಳಿಸುವ ಸಾಧನವಾಗಿದೆ ಎಂಬುದು ಸ್ಪಷ್ಟವಾಗಿದೆ. ಸೀಮಾ ನಿರ್ಣಯ ಕ್ರಮಕ್ಕೆ ನಾವು ಸಂಪೂರ್ಣವಾಗಿ ವಿರೋಧಿಯಾಗಿದ್ದೇವೆ. ಮಹಿಳಾ ಮೀಸಲಾತಿ ಜಾರಿಗೆ ತರಬೇಕು, ಆದರೆ ನಾವು ಕ್ಷೇತ್ರ ಪುನರ್ವಿಂಗಡಣೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.
ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಏಪ್ರಿಲ್ 16ರಿಂದ 18ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುವುದು. 2029ರಲ್ಲಿ ಇದನ್ನು ಜಾರಿಗೆ ತರಲಾಗುವುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




