‘ಸಿಜೆಪಿಯ ಬೇಡಿಕೆ ಈಡೇರಿಸುತ್ತೇವೆ’; ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ರದ್ದುಗೊಳಿಸಿದ್ದಕ್ಕೆ ಸರ್ಕಾರ ಸ್ವಾಗತ

ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರ ಮೆರವಣಿಗೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ದೇಶಾದ್ಯಂತ ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ಜುಲೈ 20ರಿಂದ 25ರ ನಡುವೆ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ಕೇಂದ್ರ ಸಚಿವ ಜೆ.ಪಿ. ನಡ್ಡಾ ಸ್ವಾಗತಿಸಿದ್ದಾರೆ. ಸೆಪ್ಟೆಂಬರ್ 5ರಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯುವ ಸಿಜೆಪಿಯ ನಿರ್ಧಾರವನ್ನು ಜೆ.ಪಿ. ನಡ್ಡಾ ಸ್ವಾಗತಿಸಿದ್ದು, ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.

ಸಿಜೆಪಿಯ ಬೇಡಿಕೆ ಈಡೇರಿಸುತ್ತೇವೆ; ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ರದ್ದುಗೊಳಿಸಿದ್ದಕ್ಕೆ ಸರ್ಕಾರ ಸ್ವಾಗತ
Jp Nadda
Image Credit source: PTI

Updated on: Sep 01, 2026 | 5:37 PM

ನವದೆಹಲಿ, ಸೆಪ್ಟೆಂಬರ್ 1: ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ವಿರುದ್ಧ ದೇಶಾದ್ಯಂತ ದಾಖಲಾಗಿದ್ದ ಎಫ್‌ಐಆರ್‌ಗಳನ್ನು (FIR) ಸುಪ್ರೀಂ ಕೋರ್ಟ್ (Supreme Court) ರದ್ದುಗೊಳಿಸಿದೆ. ತನಗಿರುವ ವಿಶೇಷ ಅಧಿಕಾರ ಬಳಸಿಕೊಂಡು ಸುಪ್ರೀಂ ಕೋರ್ಟ್ ಈ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್‌ನ ಈ ಮಹತ್ವದ ತೀರ್ಪನ್ನು ಕೇಂದ್ರ ಸರ್ಕಾರ ಸ್ವಾಗತಿಸಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ಗೆ (CJP) ನೀಡಿದ್ದ ಭರವಸೆಯಂತೆ ಸರ್ಕಾರವು ತನ್ನ ಬದ್ಧತೆಯನ್ನು ಕಾಯ್ದುಕೊಳ್ಳಲಿದ್ದು, ವಿದ್ಯಾರ್ಥಿ ಸಂಘಟನೆಯ ಸಮಂಜಸ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರವು ಕೈಗೊಂಡಿರುವ ಕ್ರಮಗಳ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ರದ್ದುಗೊಳಿಸಿತ್ತು. ಇದಾದ ಬಳಿಕ ಸುಪ್ರೀಂ ಕೋರ್ಟ್ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಎಫ್​ಐಆರ್​​ಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ದೇಶಾದ್ಯಂತ ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್ ರದ್ದು; ಸುಪ್ರೀಂ ಕೋರ್ಟ್ ಆದೇಶ

ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಶಿಕ್ಷಣ ಕ್ಷೇತ್ರದಲ್ಲಿನ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿಜೆಪಿ ಇಟ್ಟಿರುವ ಎಲ್ಲಾ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ಈಡೇರಿಸಲಿದೆ ಎಂದು ಭರವಸೆ ನೀಡಿದರು. ಅಲ್ಲದೆ ಯುವಜನರ ಅಭಿವೃದ್ಧಿ ಮತ್ತು ಕಲ್ಯಾಣವು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.


“ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲಾಗುವುದು ಮತ್ತು ಭವಿಷ್ಯದಲ್ಲಿ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಎಂದು ಭಾರತ ಸರ್ಕಾರದ ಪರವಾಗಿ ನಾವು ಭರವಸೆ ನೀಡಿದ್ದೆವು. ಇದಕ್ಕೆ ಅನುಗುಣವಾಗಿ, ನಾವು ಬಿಜೆಪಿ ಆಡಳಿತವಿರುವ ರಾಜ್ಯ ಸರ್ಕಾರಗಳೊಂದಿಗೂ ಸಮಾಲೋಚನೆ ನಡೆಸಿದ್ದು, ಈಗ ಆ ಭರವಸೆಯನ್ನು ಈಡೇರಿಸುತ್ತಿದ್ದೇವೆ” ಎಂದು ನಡ್ಡಾ ಹೇಳಿದರು.

ಇದನ್ನೂ ಓದಿ: ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ; ಸೆಪ್ಟೆಂಬರ್​ 5ರ ಪ್ರತಿಭಟನೆ ಕೈಬಿಟ್ಟ ಸಿಜೆಪಿ

ಜುಲೈನಲ್ಲಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿ ಸಿಜೆಪಿ ಈ ಮೆರವಣಿಗೆಗೆ ಕರೆ ನೀಡಿತ್ತು. ದೆಹಲಿ ಪೊಲೀಸರು ಈ ಪ್ರತಿಭಟನೆಗೆ ಸಂಬಂಧಿಸಿದಂತೆ 13 ಪ್ರಕರಣಗಳನ್ನು ದಾಖಲಿಸಿದ್ದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Tue, 1 September 26

Loading...
Unable to load recommendations.
Follow Us