Kerala Rains: ಕೇರಳದಲ್ಲಿ ಭಾರೀ ಮಳೆ; ಪತ್ತನಂತಿಟ್ಟ, ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

|

Updated on: May 21, 2024 | 8:27 PM

ಕೇರಳ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿರುವುದರಿಂದ ಕೆಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಪತ್ತನಂತಿಟ್ಟ, ಕೊಟ್ಟಾಯಂ, ಆಲಪ್ಪುಳ, ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Kerala Rains: ಕೇರಳದಲ್ಲಿ ಭಾರೀ ಮಳೆ; ಪತ್ತನಂತಿಟ್ಟ, ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಮಳೆ
Follow us on

ತಿರುವನಂತಪುರಂ: ಭಾರತೀಯ ಹವಾಮಾನ ಇಲಾಖೆ (IMD) ಇಂದು ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಿಸಿದ್ದು, ಮೇ 22ರಂದು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಕೇರಳದ (Kerala Weather Today) ರಾಜಧಾನಿ ತಿರುವನಂತಪುರಂ ಸೇರಿದಂತೆ 8 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಐಎಂಡಿ ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.

ಕೇರಳದ ಉತ್ತರ ಭಾಗದ 6 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಪಾಲಕ್ಕಾಡ್, ಕೋಯಿಕ್ಕೋಡ್, ಕಣ್ಣೂರು, ಮಲಪ್ಪುರಂ, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯು ಅಪಾಯಗಳನ್ನು ಉಂಟುಮಾಡುವ ಕಾರಣ, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಜನರಿಗೆ ಜಾಗರೂಕರಾಗಿರಲು ಸಲಹೆ ನೀಡಿದೆ.

ಇದನ್ನೂ ಓದಿ: Weather Today: ಕೇರಳದ 3 ಜಿಲ್ಲೆಗಳಿಗೆ ರೆಡ್ ಅಲರ್ಟ್; ತಮಿಳುನಾಡಿನಲ್ಲೂ ಇನ್ನೆರರಡು ದಿನ ಮಳೆ

ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು ಭಾರೀ ಮಳೆಯನ್ನು ಸೂಚಿಸುತ್ತದೆ. ಆದರೆ, ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ.ನಿಂದ 20 ಸೆಂ.ಮೀ.ವರೆಗಿನ ಅತಿ ಭಾರೀ ಮಳೆ, ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ.

ಇಂದು ಬೆಳಿಗ್ಗೆ 9.30ರ ಸುಮಾರಿಗೆ ತಿರುವನಂತಪುರದ ಪೋತೆನ್‌ಕೋಡ್‌ನಲ್ಲಿ ಮಹಿಳೆಯೊಬ್ಬರು ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ತೋಯ್ದು ಹಳೆ ಗೋಡೆ ಕುಸಿದು ಬಿದ್ದಿದ್ದು, ಇಡತ್ತಾರ ವಾರ್ಡ್‌ನ ಚುಮಡುತಂಗಿ ವಿಳದ ಶ್ರೀಕಲಾ (61) ಎಂಬುವರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಆಕೆಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Karnataka Rains: ಉಡುಪಿ, ಕೊಡಗು, ಶಿವಮೊಗ್ಗ ಸೇರಿದಂತೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ, ಆರೆಂಜ್​ ಅಲರ್ಟ್​

ಕೇರಳ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಮತ್ತು ಮಣ್ಣು ಕುಸಿತದ ಸಾಧ್ಯತೆಗಳಿರುವುದರಿಂದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ತಾಲೂಕು ಕಚೇರಿಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ. ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರಿಗೆ ಮಳೆಯ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಲು ವಿಶೇಷ ನಿರ್ದೇಶನಗಳನ್ನು ನೀಡಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ. ಭೂಕುಸಿತದ ಭೀತಿಯ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ನಿಯಮಗಳ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಅಗತ್ಯ ಬಿದ್ದರೆ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಪ್ರಯಾಣ ನಿಷೇಧ ಹೇರುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಎಲ್ಲಾ ತುರ್ತು ಸಂದರ್ಭಗಳನ್ನು ನಿಭಾಯಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಎಲ್ಲಾ ಕಲೆಕ್ಟರೇಟ್ ಮತ್ತು ತಾಲೂಕು ಕಚೇರಿಗಳಲ್ಲಿ 24×7 ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ತೆರೆಯಲಾಗಿದೆ. ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯ ಬಗ್ಗೆ ಆರೋಗ್ಯ ಇಲಾಖೆ ಎಲ್ಲಾ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Tue, 21 May 24