ಭೂಮಿ ದುಂಡಗಿದೆ, ಎಲ್ಲರ ಲೆಕ್ಕ ಚುಕ್ತಾ ಆಗುತ್ತದೆ; ವಿಧಾನಸಭೆಯಲ್ಲಿ ಟಿಎಂಸಿ ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ

"ದೇಶದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಇಂತಹ ಹೀನಾಯ ಸ್ಥಿತಿ ಬಂದಿರಲಿಲ್ಲ" ಎಂದು ಟಿಎಂಸಿ ಪಕ್ಷವನ್ನು ಉಲ್ಲೇಖಿಸಿ ಲೇವಡಿ ಮಾಡಿದ ಸುವೇಂದು ಅಧಿಕಾರಿ, ಕಾನೂನನ್ನು ಕೈಗೆತ್ತಿಕೊಂಡಿದ್ದ ಮತ್ತು ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದ ಅಧಿಕಾರಿಗಳು ಹಾಗೂ ನಾಯಕರು ಇನ್ಮುಂದೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ಬಂಗಾಳದಲ್ಲಿ ದಶಕಗಳ ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ, ಸುವೇಂದು ಅಧಿಕಾರಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಭೂಮಿ ದುಂಡಗಿದೆ, ಎಲ್ಲರ ಲೆಕ್ಕ ಚುಕ್ತಾ ಆಗುತ್ತದೆ; ವಿಧಾನಸಭೆಯಲ್ಲಿ ಟಿಎಂಸಿ ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
Suvendu Adhikari

Updated on: Jun 23, 2026 | 10:40 PM

ಕೊಲ್ಕತ್ತಾ, ಜೂನ್ 23: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರು ಹಿಂದಿನ ಸರ್ಕಾರದ ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವೈಫಲ್ಯಗಳ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. “ಭೂಮಿ ದುಂಡಗಿದೆ, ಇಲ್ಲಿ ಎಲ್ಲದಕ್ಕೂ ಲೆಕ್ಕ ಚುಕ್ತಾ ಆಗೇ ಆಗುತ್ತದೆ” ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಹಿಂದಿನ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ರಾಜ್ಯಪಾಲರ ಬಜೆಟ್ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಟಿಎಂಸಿ ಸರ್ಕಾರದ ಅವಧಿಯ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಸಂಪಾದಿಸಿದ ಆಸ್ತಿಗಳನ್ನು ಹರಾಜು ಹಾಕಿ, ಆ ಹಣವನ್ನು ಸಾರ್ವಜನಿಕರಿಗೆ ಮರಳಿಸುವ ಹೊಸ ಕಾನೂನನ್ನು ತಮ್ಮ ಸರ್ಕಾರ ಜಾರಿಗೆ ತರಲಿದೆ ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ; ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1ರಿಂದ ಭಾರಿ ದಂಡ!

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಹೆಸರನ್ನು ನೇರವಾಗಿ ಪ್ರಸ್ತಾಪಿಸದಿದ್ದರೂ, ಹರೀಶ್ ಚಟರ್ಜಿ ಸ್ಟ್ರೀಟ್, ಹರೀಶ್ ಮುಖರ್ಜಿ ರಸ್ತೆ ಮತ್ತು ಕಾಳಿಘಾಟ್ ಪ್ರದೇಶಗಳಲ್ಲಿರುವ ಆಸ್ತಿಗಳ ಬಗ್ಗೆ ಅವರು ಉಲ್ಲೇಖ ಮಾಡಿದ್ದಾರೆ. ಇಂತಹ ಅಕ್ರಮ ಆಸ್ತಿಗಳನ್ನು ಹೊಂದಿರುವವರು ಕಠಿಣ ಕಾನೂನು ಕ್ರಮ ಮತ್ತು ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಅವರು ನೇರ ಎಚ್ಚರಿಕೆ ನೀಡಿದ್ದಾರೆ.


ಸುವೇಂದು ಅಧಿಕಾರಿ ಅವರ ಈ ಹೇಳಿಕೆಯು ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆಯಿದೆ. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹಾ ಭೂಕಂಪ: ಟಿಎಂಸಿ ಬಂಡಾಯ ಸಂಸದರಿಂದ ಹೊಸ ಪಕ್ಷ ಸ್ಥಾಪನೆ, ಎನ್‌ಡಿಎ ಜೊತೆ ವಿಲೀನ ಸಾಧ್ಯತೆ

“ಕಳೆದ ಚುನಾವಣಾ ಸಂದರ್ಭಗಳಲ್ಲಿ ಬಂಗಾಳದಲ್ಲಿ ಪ್ರಜಾಪ್ರಭುತ್ವ ಎನ್ನುವುದೇ ಇರಲಿಲ್ಲ. ವಿರೋಧ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಯಿತು, ಮತದಾನದ ಹಕ್ಕನ್ನು ಕಸಿಯಲಾಯಿತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಬಂಗಾಳದಲ್ಲಿ ಭಯದ ವಾತಾವರಣ ಮುಗಿದಿದ್ದು, ನಂಬಿಕೆಯ ಯುಗ ಆರಂಭವಾಗಿದೆ” ಎಂದರು.

ಅಕ್ರಮಗಳ ತನಿಖೆ:

ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಆಡಳಿತಾತ್ಮಕ ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರತಿಯೊಂದು ಹಗರಣಗಳನ್ನೂ ಪತ್ತೆಹಚ್ಚಿ ಕಾನೂನುಬದ್ಧವಾಗಿ ಶಿಕ್ಷಿಸಲಾಗುವುದು. ಪ್ರತಿಯೊಬ್ಬರ ಲೆಕ್ಕ ಚುಕ್ತಾ ಆಗಲಿದೆ ಎಂದು ಅವರು ಗುಡುಗಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us