ಭಾರತ-ಬಾಂಗ್ಲಾ ಗಡಿ ಬೇಲಿ ನಿರ್ಮಾಣಕ್ಕೆ ಪಶ್ಚಿಮ ಬಂಗಾಳದಿಂದ ಬಿಎಸ್ಎಫ್ಗೆ 31 ಎಕರೆ ಹಸ್ತಾಂತರ
ದೇಶದ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ 31 ಎಕರೆ ಭೂಮಿ ಹಸ್ತಾಂತರ ಅತ್ಯಂತ ನಿರ್ಣಾಯಕವಾಗಿದ್ದು, ಮುಂಬರುವ ದಿನಗಳಲ್ಲಿ ಪಶ್ಚಿಮ ಬಂಗಾಳದ ಮೂಲಕ ನಡೆಯುವ ಅಕ್ರಮ ಬಾಂಗ್ಲಾ ನುಸುಳುವಿಕೆಯನ್ನು ಶೂನ್ಯಕ್ಕೆ ಇಳಿಸಲು ಇದು ಸಹಕಾರಿಯಾಗಲಿದೆ. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬೇಲಿ ನಿರ್ಮಾಣಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರವು ಸುಮಾರು 31 ಎಕರೆ ಭೂಮಿಯನ್ನು ಬಿಎಸ್ಎಫ್ಗೆ ಹಸ್ತಾಂತರಿಸಿದೆ. ಬೇಲಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಬಿಎಸ್ಎಫ್ಗೆ ಭೂಮಿಯನ್ನು ವರ್ಗಾಯಿಸುವ ಪ್ರಸ್ತಾಪಗಳಿಗೂ ಸರ್ಕಾರ ಅನುಮೋದನೆ ನೀಡಿದೆ.

ಕೊಲ್ಕತ್ತಾ, ಜೂನ್ 3: ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ (Bangladesh Border) ಅಕ್ರಮ ನುಸುಳುವಿಕೆ ಮತ್ತು ಕಳ್ಳಸಾಗಣೆಗೆ ಶಾಶ್ವತವಾಗಿ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಮಹತ್ವದ ಹೆಜ್ಜೆ ಇಟ್ಟಿವೆ. ಗಡಿ ಭಾಗದಲ್ಲಿ ಬಾಕಿ ಉಳಿದಿರುವ ಬೇಲಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಪಶ್ಚಿಮ ಬಂಗಾಳ ಸರ್ಕಾರವು ಬರೋಬ್ಬರಿ 31 ಎಕರೆ ಭೂಮಿಯನ್ನು ಗಡಿ ಭದ್ರತಾ ಪಡೆಗೆ (BSF) ಹಸ್ತಾಂತರಿಸಿದೆ.
ದಾಖಲೆಗಳಿಲ್ಲದ ಬಾಂಗ್ಲಾದೇಶಿ ವಲಸಿಗರ ವಿರುದ್ಧ ದೇಶಾದ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಗಡಿಯನ್ನು ಮತ್ತಷ್ಟು ಭದ್ರಪಡಿಸಲು ಈ ಭೂಮಿಯನ್ನು ನೀಡಲಾಗಿದೆ.
ಇದನ್ನೂ ಓದಿ: ಅಹಮದಾಬಾದ್ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧನ
ಅಂತಾರಾಷ್ಟ್ರೀಯ ಗಡಿಯಲ್ಲಿ ಕಾವಲು ಬಲಪಡಿಸುವ ಮತ್ತು ನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ, ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಮತ್ತು ನದಿಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 31 ಎಕರೆ ಭೂಮಿಯನ್ನು ಗಡಿ ಬೇಲಿ ಯೋಜನೆಗಾಗಿ ಬಿಎಸ್ಎಫ್ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ದೀರ್ಘಕಾಲದ ಗೊಂದಲಗಳನ್ನು ಬಗೆಹರಿಸಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಭಾರತ ಮತ್ತು ಬಾಂಗ್ಲಾದೇಶದ ನಡುವೆ ಪಶ್ಚಿಮ ಬಂಗಾಳವು ಅತಿ ಉದ್ದದ ಗಡಿಯನ್ನು ಹಂಚಿಕೊಂಡಿದೆ. ಆದರೆ, ಕೆಲವು ಕಡೆಗಳಲ್ಲಿ ಭೂಮಿ ಲಭ್ಯವಿಲ್ಲದ ಕಾರಣ ಗಡಿ ಬೇಲಿ ನಿರ್ಮಾಣ ಕಾರ್ಯ ಅಪೂರ್ಣವಾಗಿ ಉಳಿದಿತ್ತು. ಬೇಲಿ ಇಲ್ಲದ ಮುಕ್ತ ಗಡಿ ಪ್ರದೇಶಗಳನ್ನು ಬಳಸಿಕೊಂಡು ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ಭಾರತದೊಳಗೆ ನುಸುಳುತ್ತಿದ್ದರು. ಅಲ್ಲದೆ ಜಾನುವಾರು ಮತ್ತು ಮಾದಕ ದ್ರವ್ಯಗಳ ಕಳ್ಳಸಾಗಣೆ ದೊಡ್ಡ ಸವಾಲಾಗಿತ್ತು. ಈಗ ಬೇಲಿ ನಿರ್ಮಾಣದಿಂದ ಇದಕ್ಕೆ ಮುಕ್ತಿ ಸಿಗಲಿದೆ.
ಇದನ್ನೂ ಓದಿ: ಭಾರತ-ನೇಪಾಳ ಗಡಿ ವಿಷಯದಲ್ಲಿ ಮೂರನೇ ದೇಶದ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ; ಭಾರತದ ಖಡಕ್ ಸಂದೇಶ
ಸಾಮಾನ್ಯವಾಗಿ ಗಡಿ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವೆ ಭಿನ್ನಾಭಿಪ್ರಾಯಗಳು ಕೇಳಿಬರುತ್ತಿದ್ದವು. ಆದರೆ, ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರವು ಈ ಬಾರಿ ಬಿಎಸ್ಎಫ್ಗೆ ಭೂಮಿ ನೀಡಲು ಸಮ್ಮತಿಸಿದೆ. ಈ ಭೂಮಿ ಕೈಸೇರುತ್ತಿದ್ದಂತೆ ಬಿಎಸ್ಎಫ್ ಮತ್ತು ಕೇಂದ್ರ ಲೋಕೋಪಯೋಗಿ ಇಲಾಖೆಯು ಬೇಲಿ ನಿರ್ಮಾಣ ಕಾರ್ಯವನ್ನು ಆರಂಭಿಸಲಿವೆ. ಆಧುನಿಕ ತಂತ್ರಜ್ಞಾನದ ಫ್ಲಡ್ಲೈಟ್ಗಳು ಮತ್ತು ಕಣ್ಗಾವಲು ಕ್ಯಾಮೆರಾಗಳನ್ನು ಈ ಗಡಿ ಭಾಗದಲ್ಲಿ ಅಳವಡಿಸಲಾಗುವುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




