Tirupati Stampede: ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಕಾರಣವೇನು?

ಬುಧವಾರ ಸಂಜೆ ತಿರುಪತಿ ದೇವಸ್ಥಾನದ ಬಳಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧಿಕಾರಿಗಳು ತಿಳಿಸಿದ್ದಾರೆ. ತಿರುಮಲ ಶ್ರೀವಾರಿ ವೈಕುಂಠ ದ್ವಾರ ಟಿಕೆಟಿಂಗ್ ಕೌಂಟರ್ ಬಳಿಯ ವಿಷ್ಣು ನಿವಾಸದ ಬಳಿ ದರ್ಶನ ಟೋಕನ್ ವಿತರಣೆ ವೇಳೆ ಈ ಘಟನೆ ನಡೆದಿದೆ.

Tirupati Stampede: ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಕಾರಣವೇನು?
ತಿರುಪತಿ
Image Credit source: NDTV

Updated on: Jan 09, 2025 | 11:05 AM

ತಿರುಪತಿಯಲ್ಲಿ ಭೀಕರ ದುರಂತ ನಡೆದಿದೆ. ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿ ಆರು ಭಕ್ತರು ಸಾವನ್ನಪ್ಪಿದ್ದಾರೆ. ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸರತಿ ಸಾಲಿನಲ್ಲಿ ಹೋಗುವಾಗ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಮೃತರನ್ನು ಗುರುತಿಸಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ.

ತಿರುಪತಿಯಲ್ಲಿ ನಡೆದ ಕಾಲ್ತುಳಿತ ಘಟನೆಗೆ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಆಘಾತ ವ್ಯಕ್ತಪಡಿಸಿದ್ದಾರೆ . ಮೃತರ ಕುಟುಂಬಗಳಿಗೆ ಪವನ್ ಕಲ್ಯಾಣ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತ ಘಟನೆಯು ತನ್ನ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

ಶ್ರೀಗಳ ದರ್ಶನಕ್ಕೆ ಬಂದ ಭಕ್ತರು ಈ ರೀತಿ ಪ್ರಾಣ ಕಳೆದುಕೊಂಡಿರುವುದು ಬೇಸರ ತಂದಿದೆ. ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮತ್ತಷ್ಟು ಓದಿ: Tirupati Stampede: ತಿರುಪತಿ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಮಂದಿಗೆ ಗಾಯ

ತಿರುಪತಿ ಕಾಲ್ತುಳಿತ ಘಟನೆಗೆ ಸಚಿವ ನಾರಾ ಲೋಕೇಶ್ ಆಘಾತ ವ್ಯಕ್ತಪಡಿಸಿದ್ದಾರೆ. ಭಕ್ತರ ಸಾವು ಅತೀವ ದುಃಖ ತಂದಿದೆ ಎಂದರು. ಮೃತರ ಕುಟುಂಬದ ಬೆಂಬಲಕ್ಕೆ ಸರ್ಕಾರ ನಿಲ್ಲಲಿದೆ ಎಂದು ಸಚಿವ ಲೋಕೇಶ್ ಹೇಳಿದ್ದಾರೆ. ಇಂತಹ ಘಟನೆಗಳು ನಡೆಯದಂತೆ ಟಿಟಿಡಿ ಇನ್ನಷ್ಟು ದೃಢವಾದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.

ಕಾಲ್ತುಳಿತಕ್ಕೆ ಕಾರಣವೇನು?
ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಮಾತನಾಡಿ, ಕಾಲ್ತುಳಿತಕ್ಕೆ ಜನಸಂದಣಿ ಕಾರಣ ಎಂದು ಹೇಳಿದ್ದಾರೆ. ಬೇರೆಲ್ಲಾ ಕೌಂಟರ್​ನಲ್ಲಿ ಪರಿಸ್ಥಿತಿ ಶಾಂತವಾಗಿತ್ತು. ಈ ಕೌಂಟರ್​ನಲ್ಲಿ ಮಾತ್ರ 4-5 ಸಾವಿರ ಮಂದಿ ಒಟ್ಟುಗೂಡಿದ್ದರು.ಇದು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದರು.

ಟಿಟಿಡಿ ಆಡಳಿತ ಮಂಡಳಿ ಸದಸ್ಯ ಭಾನುಪ್ರಕಾಶ್ ರೆಡ್ಡಿ ಮಾತನಾಡಿ, ಏಕಾದಶಿ ದರ್ಶನಕ್ಕೆ ಟೋಕನ್ ವಿತರಿಸಲು 91 ಕೌಂಟರ್​ಗಳನ್ನು ತೆರೆಯಲಾಗಿತ್ತು, ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕಾಗಿ ಟೋಕನ್ ಪಡೆಯಲು 4,000 ಕ್ಕೂ ಹೆಚ್ಚು ಭಕ್ತರು ಜಮಾಯಿಸಿದ್ದರಿಂದ ತಿರುಪತಿಯಲ್ಲಿ ಅಸ್ತವ್ಯಸ್ತವಾಗಿತ್ತು.

ಬಲಿಯಾದವರಲ್ಲಿ ಮಲ್ಲಿಕಾ ಎಂದು ಗುರುತಿಸಲಾದ ಮಹಿಳಾ ಭಕ್ತೆಯೊಬ್ಬರು ಬೈರಾಗಿ ಪಟ್ಟಿಡಾ ಪಾರ್ಕ್‌ನ ಟೋಕನ್ ಕೌಂಟರ್‌ ಒಂದರಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಅವಳನ್ನು ಆಸ್ಪತ್ರೆಗೆ ಸಾಗಿಸಲು, ಗೇಟ್‌ಗಳನ್ನು ತೆರೆಯಲಾಯಿತು. ಬಳಿಕ ನೂಕುನುಗ್ಗಲು ಉಂಟಾಗಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 am, Thu, 9 January 25