‘ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ’; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಅವರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ಹೂಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ತನಿಖೆಗೆ ಆದೇಶಿಸಿದ್ದು, ಚಾಲಕನಾಗಿದ್ದ ಪೊಲೀಸ್ ಅಧಿಕಾರಿಯನ್ನು ಹಾಲಿ ಹುದ್ದೆಯಿಂದ ತೆರವುಗೊಳಿಸಿದ್ದಾರೆ. ನೀಟ್ ಅಕ್ರಮದ ವಿರುದ್ಧ ಬುಧವಾರ ನಡೆದ ಪ್ರತಿಭಟನೆಯ ನಂತರ ಬಂಧಿತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್‌ನೊಳಗೆ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಡ್ರಗ್ಸ್ ಪ್ರಕರಣದಲ್ಲಿ ನಿನ್ನನ್ನು ಸಿಲುಕಿಸುತ್ತೇನೆ; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು
Delhi Police Thretens
Image Credit source: x

Updated on: Jul 23, 2026 | 3:26 PM

ಮುಂಬೈ, ಜುಲೈ 23: ಜಂತರ್​ ಮಂತರ್​​ನಲ್ಲಿ (Delhi Protest) ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ‘ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾನಿರತ ಯುವಕನ ವಿರುದ್ಧ ನಕಲಿ ಮಾದಕ ದ್ರವ್ಯ (ಡ್ರಗ್ಸ್) ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ವಿಡಿಯೋದಲ್ಲಿ ಅಧಿಕಾರಿಯು ಪ್ರತಿಭಟನಾಕಾರರನ್ನು ಬೆದರಿಸುವುದು ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುವುದು ಸ್ಪಷ್ಟವಾಗಿ ಕಂಡುಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ, ಸಾರ್ವಜನಿಕರು ಹಾಗೂ ಮಾನವ ಹಕ್ಕುಗಳ ಹೋರಾಟಗಾರರಿಂದ ಮುಂಬೈ ಪೊಲೀಸ್ ಇಲಾಖೆಯ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಯಿತು.

ಇದನ್ನೂ ಓದಿ: ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ

“ನಾನು ನಿಮ್ಮನ್ನು ಮತ್ತೆ ಪ್ರತಿಭಟನೆಯಲ್ಲಿ ನೋಡಿದರೆ, ನಿಮ್ಮ ಜೇಬಿನಲ್ಲಿ 50 ಗ್ರಾಂ ಡ್ರಗ್ಸ್ ಇಡುತ್ತೇನೆ. ನಂತರ ನಿಮ್ಮ ಜೀವನವೇ ಹಾಳಾಗುತ್ತದೆ. ನಿಮಗೆ ಜಾಮೀನು ಕೂಡ ಸಿಗುವುದಿಲ್ಲ, ಜೈಲಿನಲ್ಲೇ ಕೊಳೆಯಬೇಕಾಗುತ್ತದೆ” ಎಂದು ಪೊಲೀಸ್ ಸಿಬ್ಬಂದಿ ಹೇಳುವುದು ವಿಡಿಯೋದಲ್ಲಿ ದಾಖಲಾಗಿದೆ. ಈ ವೇಳೆ ವಾಹನದ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ನಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರ ಈ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಆಂತರಿಕ ಇಲಾಖಾ ತನಿಖೆಗೆ ಆದೇಶಿಸಿದ್ದರು.


ಅಧಿಕಾರಿಯ ಅಮಾನತು:

ಪ್ರಾಥಮಿಕ ತನಿಖೆಯಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯ ನಡವಳಿಕೆಯು ಶಿಸ್ತುಬಾಹಿರ, ಗಂಭೀರ ಸ್ವರೂಪದ ನಿಯಮ ಉಲ್ಲಂಘನೆ ಮತ್ತು ಅಧಿಕಾರ ದುರ್ಬಳಕೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸ್ ಆಯುಕ್ತರ ಸೂಚನೆಯಂತೆ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ನೀಟ್ ಪೇಪರ್ ಸೋರಿಕೆ: ಮೌನ ಮುರಿದ ಪ್ರಧಾನಿ, ಫಾಸ್ಟ್​ ಟ್ರ್ಯಾಕ್ ಕೋರ್ಟ್​ ಮಾಡಿ ಅಪರಾಧಿಗಳಿಗೆ ಶಿಕ್ಷೆ ಕೊಡ್ತೀವಿ ಎಂದ ಮೋದಿ

ಕಾನೂನು ಸುವ್ಯವಸ್ಥೆ ಕಾಪಾಡುವವರು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದನ್ನು ಅಥವಾ ಸುಳ್ಳು ಪ್ರಕರಣಗಳ ಬೆದರಿಕೆ ಹಾಕುವುದನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ವಲಯದ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ವಿಡಿಯೋ ಬಯಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us