ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ?

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆಯಲಿರುವ ಬಿಜೆಪಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಾಳೆ ಯಾರೆಲ್ಲಾ ಭಾಗವಹಿಸಲಿದ್ದಾರೆ? ಎಂಬುದರ ಮಾಹಿತಿ ಇಲ್ಲಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಶನಿವಾರ ಪಶ್ಚಿಮ ಬಂಗಾಳದ ಪಕ್ಷದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಕಾರಣಕ್ಕೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ.

ನಾಳೆ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ; ಮಮತಾ ಬ್ಯಾನರ್ಜಿ ಬರುತ್ತಾರಾ?
Suvendu Adhikari And Mamata Banerjee
Image Credit source: PTI

Updated on: May 08, 2026 | 7:09 PM

ಕೊಲ್ಕತ್ತಾ, ಮೇ 8: ಇಂದು ಕೊಲ್ಕತ್ತಾದಲ್ಲಿ ಬಿಜೆಪಿ ಕೇಂದ್ರ ವೀಕ್ಷಕ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸುವೇಂದು ಅಧಿಕಾರಿ (Suvendu Adhikari) ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಉಪಸ್ಥಿತರಿರುತ್ತಾರೆ. ಹಾಗೇ, ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ನಾಳೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಥಳದಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್. ರವಿ ಅವರು ಮೇ 7ರಂದು ಪಶ್ಚಿಮ ಬಂಗಾಳ ವಿಧಾನಸಭೆಯನ್ನು ಅಧಿಕೃತವಾಗಿ ವಿಸರ್ಜಿಸಿದರು. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರೇ ಸಂಪುಟವನ್ನು ವಿಸರ್ಜಿಸಿದರು. ಈಗ ಮಮತಾ ಬ್ಯಾನರ್ಜಿ ನಾಳೆ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಇದನ್ನೂ ಓದಿ: Suvendu Adhikari: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ; ನಾಳೆಯೇ ಪ್ರಮಾಣವಚನ

ಹೊಸ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ನಿರ್ಗಮಿಸುವ ಮುಖ್ಯಮಂತ್ರಿ ಭಾಗವಹಿಸಬೇಕೆಂದು ಯಾವುದೇ ಸ್ಥಿರ ಸಾಂವಿಧಾನಿಕ ನಿಯಮ ಅಥವಾ ಕಠಿಣ ಶಾಸನಬದ್ಧ ಕಾನೂನು ಇಲ್ಲದಿದ್ದರೂ ಸಾಮಾನ್ಯವಾಗಿ ಮಾಜಿ ಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಪ್ರದಾಯವಿದೆ. ನಿರ್ಗಮಿಸುವ ಮುಖ್ಯಮಂತ್ರಿ ಗಣ್ಯರನ್ನು ಸ್ವಾಗತಿಸಲು ಮತ್ತು ಹೊಸ ಸಿಎಂ ಅವರನ್ನು ಅಭಿನಂದಿಸಲು ಹಾಜರಿರುವುದು ವಾಡಿಕೆಯಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ

ಆದರೂ ರಾಜಕೀಯ ಭಿನ್ನಾಭಿಪ್ರಾಯ, ಉದ್ವಿಗ್ನ ಸಂಬಂಧಗಳು, ಆರೋಗ್ಯ ಕಾರಣಗಳು ಅಥವಾ ವೇಳಾಪಟ್ಟಿ ಸಮಸ್ಯೆಗಳಿಂದಾಗಿ ನಿರ್ಗಮಿತ ಮುಖ್ಯಮಂತ್ರಿಗಳು ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ತಪ್ಪಿಸಿಕೊಂಡ ಹಲವಾರು ಉದಾಹರಣೆಗಳಿವೆ. ಅವರ ಅನುಪಸ್ಥಿತಿಯನ್ನು ಶಿಷ್ಟಾಚಾರದ ಉಲ್ಲಂಘನೆ ಎಂದು ಪರಿಗಣಿಸಲಾಗುವುದಿಲ್ಲ. ಹೀಗಾಗಿ, ನಾಳೆಯ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಆಗಮಿಸುವ ಸಾಧ್ಯತೆ ಇಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us