- Kannada News Photo gallery Chitradurga: Former students give government school a high tech upgrade; see photos
ಚಿತ್ರದುರ್ಗ: ಕೋಟ್ಯಂತರ ರೂ ವೆಚ್ಚದಲ್ಲಿ ಸರ್ಕಾರಿ ಶಾಲೆ ಚಿತ್ರಣವನ್ನೇ ಬದಲಿಸಿದ ಹಳೇ ವಿದ್ಯಾರ್ಥಿಗಳು
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಾಳವಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಕಾಯಕಲ್ಪ ನೀಡಿದ್ದಾರೆ. 1 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ಶಾಲೆಯನ್ನು ನಿರ್ಮಿಸಿದ್ದಾರೆ. ಸುಸಜ್ಜಿತ 12 ಕೊಠಡಿಗಳು, ಸ್ಮಾರ್ಟ್ ತರಗತಿಗಳನ್ನು ನಿರ್ಮಿಸಲಾಗಿದೆ. ಹೈಟೆಕ್ ಸರ್ಕಾರಿ ಶಾಲೆಯ ಫೋಟೋಸ್ ಇಲ್ಲಿವೆ ನೋಡಿ.
Updated on:Aug 17, 2025 | 11:14 AM

ಅದು ಶತಮಾನದಷ್ಟು ಹಳೆಯ ಸರ್ಕಾರಿ ಶಾಲೆ. ಅವನತಿಯ ಅಂಚಿನಲ್ಲಿದ್ದ ಶಾಲೆಗೆ ಹಳೆಯ ವಿದ್ಯಾರ್ಥಿಗಳು ಕಾಯಕಲ್ಪ ನೀಡಿದ್ದಾರೆ. ಸರ್ಕಾರದ ಜತೆ ಕೈಜೋಡಿಸಿ ಕೋಟ್ಯಂತರ ರೂ. ವೆಚ್ಚದಲ್ಲಿ ನವನಿರ್ಮಾಣ ಮಾಡಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಾಳವಟ್ಟಿ ಗ್ರಾಮದಲ್ಲಿ ಹಳೆ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲೆಗೆ ಕಾಯಕಲ್ಪ ಕಲ್ಪಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ನೂತನ ಕೊಠಡಿಗಳ ಉದ್ಘಾಟನೆ ಮಾಡಿ ಶಾಲಾ ಶತಮಾನೋತ್ಸವ ಆಚರಿಸಲಾಗಿದೆ.

ಹೌದು. 1925ರಲ್ಲಿ ಆರಂಭಗೊಂಡಿರುವ ಈ ಶಾಲೆ ಶತಮಾನ ಕಂಡಿದೆ. ಶಾಲಾ ಕಟ್ಟಡದ ದುಸ್ಥಿತಿ ಕಂಡ ಹಳೇ ವಿದ್ಯಾರ್ಥಿಗಳು ಶಾಲೆಗೆ ಕಾಯಕಲ್ಪ ಕೊಡಲು ನಿರ್ಧರಿಸಿದ್ದರು. ವಿವಿಧೆಡೆ ಉದ್ಯೋಗಗಳಲ್ಲಿರುವವರು, ದಾನಿಗಳಿಂದ ಹಣ ಸಂಗ್ರಹಿಸಿ ಸರ್ಕಾರದ ಜತೆ ಕೈಜೋಡಿಸಿದ್ದರು. ಹೀಗಾಗಿ, 1 ಕೋಟಿ ರೂ. ವೆಚ್ಚದಲ್ಲಿ ಶಾಲೆ ಅಭಿವೃದ್ಧಿ ಕಂಡಿದೆ.

ಇನ್ನು ಸರ್ಕಾರವು 25 ಲಕ್ಷ ರೂ. ಅನುದಾನ ನೀಡಿದ್ದು, ಶಾಲೆಗೆ ಕಯಕಲ್ಪ ಸಿಕ್ಕಿದೆ. ಸುಸಜ್ಜಿತ 12 ಕೊಠಡಿಗಳು, ಹೈಟೆಕ್ ಶೌಚಾಲಯ, ಆಧುನಿಕ ಅಡುಗೆ ಕೋಣೆ, ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ತರಗತಿಗಳು, ಲ್ಯಾಬ್, 10 ಕಂಪ್ಯೂಟರ್, ಸಿಸಿಟಿವಿ, ಲೈಬ್ರರಿ ಸಕಲ ವ್ಯವಸ್ಥೆ ಮಾಡಲಾಗಿದೆ.

ಶಾಲಾ ಶತಮಾನೋತ್ಸವ, ನೂತನ ಕೊಠಡಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿಯನ್ನು ಉತ್ತೇಜಿಸುವಂತೆ ಮತ್ತು ಪ್ರತಿದಿನ ಮಕ್ಕಳು ಶಾಲೆಗೆ ಹಾಜರಾಗುವಂತೆ ವಿಶೇಷ ಕಾಳಜಿವಹಿಸುವಂತೆ ಶಾಲಾ ಸಿಬ್ಬಂದಿ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಗಮನಹರಿಸುವಂತೆ ಮನವಿ ಮಾಡಿದರು.

ಒಟ್ಟಾರೆ ಕೋಟೆನಾಡು ಚಿತ್ರದುರ್ಗದ ತಾಳವಟ್ಟಿ ಗ್ರಾಮದಲ್ಲಿ ನೂರಾರು ಹಳೇ ವಿದ್ಯಾರ್ಥಿಗಳು ಸೇರಿ ಶಾಲೆಗೆ ಕಾಯಕಲ್ಪ ನೀಡುವ ಕೆಲಸ ಮಾಡಿದ್ದಾರೆ. ಆ ಮೂಲಕ ಬದುಕು ಕಟ್ಟಿಕೊಳ್ಳಲು ಬುನಾದಿಯಾದ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸಾರ್ಥಕತೆ ಮೆರೆದಿದ್ದು ಶ್ಲಾಘನೀಯ.
Published On - 11:14 am, Sun, 17 August 25

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
Read More



