
ಏಷ್ಯಾಕಪ್ (Asia Cup 2025) ಟಿ20 ಟೂರ್ನಿಯ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಟೆಸ್ಟ್ ಸರಣಿಗಾಗಿ ಸಜ್ಜಾಗಲಿದೆ. ತವರಿನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಗಾಗಿ ಇದೇ ವಾರ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ. ಈ ತಂಡದಲ್ಲಿ ಇಬ್ಬರು ಕನ್ನಡಿಗರು ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಆದರೆ ಓರ್ವ ಕನ್ನಡಿಗ ತಂಡದಿಂದ ಹೊರಬೀಳಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಕನ್ನಡಿಗ ಕರುಣ್ ನಾಯರ್ ಆಯ್ಕೆಯಾಗುವ ಸಾಧ್ಯತೆಯಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ನೀರಸ ಪ್ರದರ್ಶನ ನೀಡಿದ ಕಾರಣ ಕರುಣ್ ಅವರನ್ನು ಭಾರತ ಟೆಸ್ಟ್ ತಂಡದಿಂದ ಕೈ ಬಿಡಲಿದ್ದಾರೆ ಎಂದು ವರದಿಯಾಗಿದೆ.

ಕರುಣ್ ನಾಯರ್ ಬದಲಿಗೆ ಕರ್ನಾಟಕದ ಯುವ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಆಯ್ಕೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಎ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 150 ರನ್ ಬಾರಿಸಿ ಮಿಂಚಿದ್ದರು.

ಈ ಭರ್ಜರಿ ಪ್ರದರ್ಶನದ ಫಲವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಮಧ್ಯಮ ಕ್ರಮಾಂಕದ ದಾಂಡಿಗನಾಗಿ ದೇವದತ್ ಪಡಿಕ್ಕಲ್ ಅವರನ್ನು ಆಯ್ಕೆ ಮಾಡಲು ಆಯ್ಕೆಗಾರರು ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಹೀಗಾಗಿ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಪಡಿಕ್ಕಲ್ ಕಾಣಿಸಿಕೊಳ್ಳುವು ಸಾಧ್ಯತೆ ಹೆಚ್ಚಿದೆ.

ಇದಕ್ಕೂ ಮುನ್ನ ದೇವದತ್ ಪಡಿಕ್ಕಲ್ ಟೀಮ್ ಇಂಡಿಯಾ ಪರ 2 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 3 ಇನಿಂಗ್ಸ್ ಆಡಿರುವ ಅವರು ಒಂದು ಅರ್ಧಶತಕದೊಂದಿಗೆ ಒಟ್ಟು 90 ರನ್ ಕಲೆಹಾಕಿದ್ದಾರೆ. ಇದೀಗ ಭಾರತ ಎ ಪರ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಪಡಿಕ್ಕಲ್ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
Published On - 12:54 pm, Tue, 23 September 25