ಗಂಭೀರ್ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ ರೋಹಿತ್ ಶರ್ಮಾ
India squad for 2025 Champions Trophy: ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದ ವಿಷಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿರುವ ವಿಷಯ ಬಹಿರಂಗವಾಗಿದೆ. ಇಲ್ಲಿ ಗಂಭೀರ್ಗಿಂತ ಆಯ್ಕೆ ಸಮಿತಿ ರೋಹಿತ್ ಶರ್ಮಾ ಅವರ ನಿಲುವಿಗೆ ಹೆಚ್ಚಿನ ಮಣೆ ನೀಡಿರುವುದು ಸ್ಪಷ್ಟ.
Updated on: Jan 19, 2025 | 11:53 AM

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಟೀಮ್ ಇಂಡಿಯಾ ಪ್ರಕಟಣೆಗೆ ಶನಿವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು 3 ಗಂಟೆಗೆ. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಇದೀಗ ಬಹಿರಂಗವಾಗಿದೆ.

ಆಯ್ಕೆ ಸಮಿತಿಯೊಂದಿಗೆ ಚರ್ಚಿಸಿ ರೋಹಿತ್ ಶರ್ಮಾ ಭಾರತ ತಂಡವನ್ನು ಆಯ್ಕೆ ಮಾಡಿದ್ದರು. ಈ ಪಟ್ಟಿಯೊಂದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರೆಸ್ ಕಾನ್ಫರೆನ್ಸ್ ರೂಮ್ಗೆ 12 ಗಂಟೆಗೆ ಆಗಮಿಸಿದ್ದರು. ಆದರೆ ಇನ್ನೇನು ಟೀಮ್ ಇಂಡಿಯಾ ಘೋಷಣೆಯಾಗಲಿದೆ ಅನ್ನುವಷ್ಟರಲ್ಲಿ ತೆರೆಮರೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

ಈ ಚರ್ಚೆಯ ನಡುವೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡುವಂತೆ ಪಟ್ಟು ಹಿಡಿರುವುದಾಗಿ ವರದಿಯಾಗಿದೆ. ಆದರೆ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಪರ ವಹಿಸಿದ್ದರು. ಅಲ್ಲದೆ ಅಗರ್ಕರ್ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿರಲಿಲ್ಲ. ಹೀಗಾಗಿ ಗಿಲ್ ಅವರನ್ನೇ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.

ಇನ್ನು ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದರು. ಆದರೆ ರೋಹಿತ್ ಶರ್ಮಾ, ರಿಷಭ್ ಪಂತ್ ಪರ ನಿಂತಿದ್ದರು. ಪಂತ್ಗಿಂತ ಸ್ಯಾಮ್ಸನ್ ಅವರ ಪ್ರದರ್ಶನ ಉತ್ತಮವಾಗಿದೆ ಎಂದು ಗಂಭೀರ್ ಮನವೊಲಿಸಲು ಯತ್ನಿಸಿದರೂ, ರೋಹಿತ್ ಶರ್ಮಾ ಹಾಗೂ ಅಜಿತ್ ಅಗರ್ಕರ್ ರಿಷಭ್ ಪಂತ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹೀಗೆ ಎರಡುವರೆ ಗಂಟೆಗಳ ಕಾಲ ನಡೆದ ಈ ಚರ್ಚೆಯಲ್ಲಿ ಕೊನೆಗೂ ರೋಹಿತ್ ಶರ್ಮಾ ತಮಗೆ ಬೇಕಾದಂತಹ ತಂಡವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಹಿಟ್ಮ್ಯಾನ್ ಬಯಕೆಯಂತೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬಲಿಷ್ಠ ತಂಡವನ್ನು ರೂಪಿಸಿದೆ. ಆದರೆ ದೀರ್ಘಕಾಲ ನಡೆದ ಈ ಚರ್ಚೆಯಿಂದಾಗಿ ಇದೀಗ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿರುವುದಂತು ಸುಳ್ಳಲ್ಲ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



