ಟೀಮ್ ಇಂಡಿಯಾ ಪರ ಯುವ ಆಟಗಾರ ಪಾದಾರ್ಪಣೆ: ವರದಿ
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಶುಕ್ರವಾರದಿಂದ ಆರಂಭವಾಗಲಿದೆ. ಪರ್ತ್ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಆಲ್ರೌಂಡರ್ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.
Updated on: Nov 18, 2024 | 2:03 PM

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಸರಣಿಯ ಮೊದಲ ಪಂದ್ಯವು ಪರ್ತ್ನಲ್ಲಿ ನಡೆಯಲಿದ್ದು, ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಪರ್ತ್ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಹಿಟ್ಮ್ಯಾನ್ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ಗಾಯಗೊಂಡಿರುವ ಶುಭ್ಮನ್ ಗಿಲ್ ಕೂಡ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

ಇಲ್ಲಿ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಅಭಿಮನ್ಯು ಈಶ್ವರನ್ ಅವರನ್ನು ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ಶುಭ್ಮನ್ ಗಿಲ್ ಸ್ಥಾನದಲ್ಲಿ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡಲು ಟೀಮ್ ಇಂಡಿಯಾ ಕೋಚ್ ಬಳಗ ಚರ್ಚಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಕೆಂದರೆ ಪರ್ತ್ನ ಒಪ್ಟಸ್ ಮೈದಾನದಲ್ಲಿನ ಪಿಚ್ ಉತ್ತಮ ವೇಗ, ಬೌನ್ಸರ್ಗೆ ಸಹಕಾರಿ ಎಂದು ಈಗಾಗಲೇ ಕ್ಯುರೇಟರ್ ತಿಳಿಸಿದ್ದಾರೆ. ಇತ್ತ ನಿತೀಶ್ ಕುಮಾರ್ ರೆಡ್ಡಿ ವೇಗದ ಬೌಲಿಂಗ್ ಆಲ್ರೌಂಡರ್. ಅಲ್ಲದೆ ಅತ್ಯುತ್ತಮವಾಗಿ ಬ್ಯಾಟ್ ಬೀಸಬಲ್ಲ ಸಾಮರ್ಥ್ಯವನ್ನು ಸಹ ಹೊಂದಿದ್ದಾರೆ. ಹೀಗಾಗಿ ಗಿಲ್ ಸ್ಥಾನದಲ್ಲಿ ನಿತೀಶ್ರನ್ನು ಕಣಕ್ಕಿಳಿಸಿ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಬಲಪಡಿಸಲು ಪ್ಲ್ಯಾನ್ ರೂಪಿಸಲಾಗಿದೆ.

ಅದರಂತೆ ಪರ್ತ್ ಟೆಸ್ಟ್ ಪಂದ್ಯದ ಮೂಲಕ ನಿತೀಶ್ ಕುಮಾರ್ ರೆಡ್ಡಿ ಭಾರತದ ಪರ ಚೊಚ್ಚಲ ಟೆಸ್ಟ್ ಪಂದ್ಯವಾಡುವ ಸಾಧ್ಯತೆ ಹೆಚ್ಚಿದೆ. ಈ ಮೂಲಕ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ 4ನೇ ವೇಗಿಯಾಗಿ ಕಾಣಿಸಿಕೊಳ್ಳುವುದನ್ನು ಎದುರು ನೋಡಬಹುದು.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



