
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಇದೀಗ 4ನೇ ಪಂದ್ಯಕ್ಕೆ ಬಂದು ನಿಂತಿದೆ. ಮೊದಲ ಮೂರು ಪಂದ್ಯಗಳಲ್ಲಿ ಇಂಗ್ಲೆಂಡ್ ಒಂದು ಜಯ ಸಾಧಿಸಿದರೆ, ಭಾರತ ತಂಡವು ಬ್ಯಾಕ್ ಟು ಬ್ಯಾಕ್ 2 ಗೆಲುವುಗಳನ್ನು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಸರಣಿಯಲ್ಲಿ ಟೀಮ್ ಇಂಡಿಯಾ (Team India) 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಇದೀಗ ನಾಲ್ಕನೇ ಪಂದ್ಯಕ್ಕಾಗಿ ರಾಂಚಿಯಲ್ಲಿ ವೇದಿಕೆ ಸಿದ್ಧವಾಗಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ ಕೆಎಲ್ ರಾಹುಲ್ (KL Rahul) ಹಾಗೂ ಜಸ್ಪ್ರೀತ್ ಬುಮ್ರಾ (Jasprit Bumrah).

ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಜಸ್ಪ್ರೀತ್ ಬುಮ್ರಾ ವಿಶ್ರಾಂತಿಯ ಕಾರಣ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇತ್ತ ಮೊದಲ ಪಂದ್ಯದಲ್ಲಿ ಆಡಿದ್ದ ಕೆಎಲ್ ರಾಹುಲ್ ತೊಡೆಸಂಧು ನೋವಿನ ಸಮಸ್ಯೆಯ ಕಾರಣ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು. ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸದ ಕಾರಣ 4ನೇ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ.

ಇತ್ತ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿದಿರುವ ಕಾರಣ ಅವರ ಬದಲಿಗೆ ಮುಖೇಶ್ ಕುಮಾರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಬುಮ್ರಾ ಅವರನ್ನು ಹೊರತುಪಡಿಸಿ ಪ್ರಸ್ತುತ ತಂಡದಲ್ಲಿ ವೇಗಿಯಾಗಿ ಉಳಿದಿರುವುದು ಮೊಹಮ್ಮದ್ ಸಿರಾಜ್ ಮಾತ್ರ. ಹೀಗಾಗಿ ರಾಂಚಿ ಟೆಸ್ಟ್ನಲ್ಲಿ ಮುಖೇಶ್ ಕುಮಾರ್ಗೆ ಅವಕಾಶ ಸಿಗುವುದು ಬಹುತೇಕ ಖಚಿತ ಎನ್ನಬಹುದು.

ಮತ್ತೊಂದೆಡೆ ಕಳೆದ 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರಜತ್ ಪಾಟಿದಾರ್ ಸಂಪೂರ್ಣ ವಿಫಲರಾಗಿದ್ದಾರೆ. ಒಟ್ಟು 4 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಪಾಟಿದಾರ್ ಕಲೆಹಾಕಿರುವುದು ಕೇವಲ 46 ರನ್ಗಳು ಮಾತ್ರ. ಹೀಗಾಗಿ 4ನೇ ಟೆಸ್ಟ್ ಪಂದ್ಯದಿಂದ ಅವರನ್ನು ಕೈ ಬಿಡುವ ಸಾಧ್ಯತೆಯಿದೆ. ಅಲ್ಲದೆ ಅವರ ಬದಲಿಗೆ ಅಕ್ಷರ್ ಪಟೇಲ್ ಅಥವಾ ದೇವದತ್ ಪಡಿಕ್ಕಲ್ ಅವರನ್ನು ಕಣಕ್ಕಿಳಿಸಬಹುದು.

ಈ ಎರಡು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ರಾಂಚಿ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಇಲ್ಲಿ ರಜತ್ ಪಾಟಿದಾರ್ ಬದಲಿಗೆ ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಈಗ ಕುತೂಹಲ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್, ದೇವದತ್ ಪಡಿಕ್ಕಲ್. ಜಸ್ಪ್ರೀತ್ ಬುಮ್ರಾ (4ನೇ ಪಂದ್ಯಕ್ಕೆ ಅಲಭ್ಯ).