
ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಇದಕ್ಕೂ ಮುನ್ನ ಬುಮ್ರಾ ನಾಲ್ಕನೇ ಪಂದ್ಯದಿಂದ ಹೊರಗುಳಿಯಲಿದ್ದು, ಕೊನೆಯ ಟೆಸ್ಟ್ ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

ಪ್ರಸ್ತುತ ಮಾಹಿತಿ ಪ್ರಕಾರ, ಜಸ್ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಕನ್ಫರ್ಮ್ ಆಗಿದೆ. ಮೂರನೇ ಟೆಸ್ಟ್ ಪಂದ್ಯದ ಬಳಿಕ ಒಂದು ವಾರ ವಿಶ್ರಾಂತಿ ಲಭಿಸಿರುವ ಕಾರಣ ಬುಮ್ರಾ ಮ್ಯಾಚೆಂಸ್ಟರ್ನಲ್ಲಿ ನಿರ್ಣಾಯಕ ಪಂದ್ಯವಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ನಾಲ್ಕನೇ ಪಂದ್ಯದ ವೇಳೆ ಮತ್ತೋರ್ವ ವೇಗಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ 10 ವಿಕೆಟ್ ಕಬಳಿಸಿ ಮಿಂಚಿದ್ದ ಆಕಾಶ್ ದೀಪ್ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಲಾರ್ಡ್ಸ್ ಟೆಸ್ಟ್ನಲ್ಲಿ ಅವರು ಏಕೈಕ ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಆಕಾಶ್ ದೀಪ್ಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಇತ್ತ ಆಕಾಶ್ ದೀಪ್ ಹೊರಗುಳಿದರೆ, ಅವರ ಬದಲಿಗೆ ಕುಲ್ದೀಪ್ ಯಾದವ್ ಅಥವಾ ಶಾರ್ದೂಲ್ ಠಾಕೂರ್ ಅಥವಾ ಪ್ರಸಿದ್ಧ್ ಕೃಷ್ಣ ಅವರನ್ನು ಕಣಕ್ಕಿಳಿಸಬಹುದು. ಇಲ್ಲ ಗಾಯಾಳು ಅರ್ಷದೀಪ್ ಸಿಂಗ್ ಬದಲಿಗೆ ಆಯ್ಕೆಯಾಗಿರುವ ಅನ್ಶುಲ್ ಕಂಬೋಜ್ ಅವರನ್ನು ಆಡುವ ಬಳಗಕ್ಕೆ ಸೇರ್ಪಡೆಗೊಳಿಸಬಹುದು. ಈ ಮೂಲಕ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸುವ ಸಾಧ್ಯತೆಯಿದೆ.

ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.