ಚಾಂಪಿಯನ್ಸ್ ಟ್ರೋಫಿಯಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಸೆಮಿಫೈನಲ್ಗೇರಿರುವ ಟೀಮ್ ಇಂಡಿಯಾ ಇದೀಗ ಲೀಗ್ ಹಂತದ ಕೊನೆಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಮಾರ್ಚ್ 2 ರಂದು ದುಬೈನಲ್ಲಿ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯಕ್ಕಾಗಿ ಅಭ್ಯಾಸವನ್ನು ಆರಂಭಿಸಿರುವ ಟೀಮ್ ಇಂಡಿಯಾಗೆ ಇದೀಗ ಹೊಸ ಚಿಂತೆಯೊಂದು ಶುರುವಾಗಿದೆ.
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಅಭ್ಯಾಸಕ್ಕೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಗೈರಾಗಿದ್ದಾರೆ. ಹಿಟ್ಮ್ಯಾನ್ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಟೀಮ್ ಇಂಡಿಯಾದ ಅಭ್ಯಾಸದ ವೇಳೆ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ಹಾಗೆಯೇ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್ಮನ್ ಗಿಲ್ ಕೂಡ ಅಭ್ಯಾಸಕ್ಕೆ ಹಾಜರಾಗಿರಲಿಲ್ಲ. ಗಿಲ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಬುಧವಾರ ನಡೆದ ಅಭ್ಯಾಸದಿಂದ ಶುಭ್ಮನ್ ಗಿಲ್ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತ ಟೀಮ್ ಇಂಡಿಯಾದ ಆರಂಭಿಕರಿಬ್ಬರು ಅಭ್ಯಾಸಕ್ಕೆ ಗೈರು ಹಾಜರಾಗಿರುವುದು ಇದೀಗ ಹೊಸ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಮಾರ್ಚ್ 2 ರಂದು ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಬೆನ್ನಲ್ಲೇ ಮಾರ್ಚ್ 4 ರಂದು ಮೊದಲ ಸೆಮಿಫೈನಲ್ ಜರುಗಲಿದೆ. ಈ ಸೆಮಿಫೈನಲ್ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.
ಇದಕ್ಕೂ ಮುನ್ನ ಈ ಇಬ್ಬರು ಆಟಗಾರರು ಸಂಪೂರ್ಣ ಗುಣಮುಖರಾಗುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಔಪಚಾರಿಕ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರಾ ಅಥವಾ ಮಾರ್ಚ್ 4 ರಂದು ಸಂಪೂರ್ಣ ಫಿಟ್ನೆಸ್ನೊಂದಿಗೆ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
Published On - 12:54 pm, Thu, 27 February 25