ಏಕದಿನ ವಿಶ್ವಕಪ್ಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವ ಫೇವರೇಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತ ಟೀಮ್ ಇಂಡಿಯಾ ಅಭಿಮಾನಿಗಳು ಕೂಡ ಮೂರನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಎದುರು ನೋಡುತ್ತಿದ್ದಾರೆ. ಈ ನಿರೀಕ್ಷೆಯೊಂದಿಗೆ ಇದೀಗ ಭಾರತ ತಂಡ ಕೂಡ ಪ್ರಕಟವಾಗಿದೆ.
15 ಸದಸ್ಯರ ಟೀಮ್ ಇಂಡಿಯಾ ಘೋಷಣೆ ಬೆನ್ನಲ್ಲೇ ಈ ಬಾರಿ ಏಕದಿನ ವಿಶ್ವಕಪ್ ಭಾರತದ ಮಡಿಲಿಗೆ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಐದು ವಿಚಾರಗಳು ಭಾರತ ತಂಡದ ಪರವಿರುವುದು. ಅಂದರೆ...
ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿರುವುದು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಭಾರತದ ಆಟಗಾರರಿಗೆ ಪಿಚ್ಗಳು ಮತ್ತು ವಾತಾವರಣದ ಬಗ್ಗೆ ಉತ್ತಮ ಅರಿವಿದೆ. ಇದು ಟೀಮ್ ಇಂಡಿಯಾ ಪಾಲಿಗೆ ಲಾಭವಾಗಲಿದೆ.
ಇನ್ನು ಭಾರತದ ಪಿಚ್ನಲ್ಲಿ ಟೀಮ್ ಇಂಡಿಯಾ ಆಟಗಾರರು ಉತ್ತಮ ಸರಾಸರಿ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಭಾರತದಲ್ಲಿ ಆಡಿರುವ 110 ಏಕದಿನ ಪಂದ್ಯಗಳಲ್ಲಿ 57.94 ಸರಾಸರಿಯಲ್ಲಿ ಸ್ಕೋರ್ ಮಾಡಿದ್ದಾರೆ. ರೋಹಿತ್ ಶರ್ಮಾ 79 ಪಂದ್ಯಗಳಲ್ಲಿ 58.10 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.
ಭಾರತದ ಪಿಚ್ಗಳು ಸ್ಪಿನ್ನರ್ಗಳಿಗೆ ಸೂಕ್ತವಾಗಿವೆ. ಏಷ್ಯಾ ತಂಡಗಳ ಹೊರತಾಗಿ ಇತರೆ ಟೀಮ್ಗಳಿಗೆ ಸ್ಪಿನ್ನರ್ಗಳನ್ನು ಎದುರಿಸುವುದು ಕಷ್ಟಕರವಾಗಲಿದೆ. ಇತ್ತ ವಿಶ್ವಕಪ್ಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಮೂವರು ಸ್ಪಿನ್ನರ್ಗಳಿದ್ದಾರೆ. ಇದರಲ್ಲಿ ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಸೇರಿದ್ದಾರೆ.
ಜಸ್ಪ್ರೀತ್ ಬುಮ್ರಾ ಭಾರತದ ವೇಗದ ಬೌಲಿಂಗ್ನ ಆಧಾರಸ್ತಂಭ. ಗಾಯದ ನಂತರ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. ಇದು ಭಾರತದ ಬೌಲಿಂಗ್ ಅನ್ನು ಇನ್ನಷ್ಟು ಶಕ್ತಿಯುತವಾಗಿಸಿದೆ. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಕೂಡ ಭಾರತೀಯ ಪಿಚ್ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ.
ಇನ್ನು ಒಟ್ಟಾರೆ ತಂಡದ ರಚನೆ ಪರಿಪೂರ್ಣವಾಗಿದೆ ಎಂದರೆ ತಪ್ಪಾಗದು. ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಅನುಭವಿ ಆಟಗಾರರಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಇದ್ದಾರೆ. ಫಿನಿಶಿಂಗ್ ಪಾತ್ರದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಮೋಡಿ ಮಾಡಬಹುದು. ಹೀಗೆ ಎಲ್ಲಾ ವಿಭಾಗದಲ್ಲೂ ಟೀಮ್ ಇಂಡಿಯಾ ಬಲಿಷ್ಠವಾಗಿದ್ದು, ಹೀಗಾಗಿ ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿದೆ.
ಏಕದಿನ ವಿಶ್ವಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.