
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 31 ರಿಂದ ಶುರುವಾಗಲಿರುವ ರಂಗು ರಂಗಿನ ಕ್ರಿಕೆಟ್ ಟೂರ್ನಿಗಾಗಿ ಎಲ್ಲಾ ತಂಡಗಳು ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮಾತ್ರ ಆಘಾತ ಎದುರಾಗಿದೆ.

ಹೌದು, ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ವೇಗಿ ಪ್ರಸಿದ್ಧ್ ಕೃಷ್ಣ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಎಂದು ಕ್ರಿಕ್ಬಝ್ ವರದಿ ಮಾಡಿದೆ. ಕಳೆದ ಕೆಲ ತಿಂಗಳಿಂದ ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಸದ್ಯ ಶಸ್ತ್ರಚಿಕಿತ್ಸೆಯನ್ನು ಪೂರ್ಣಗೊಳಿಸಿರುವ ಪ್ರಸಿದ್ಧ್ ಕೃಷ್ಣ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಮುಂಬರುವ ಐಪಿಎಲ್ ಹಾಗೂ ಏಕದಿನ ವಿಶ್ವಕಪ್ನಲ್ಲಿ ಕರ್ನಾಟಕ ವೇಗಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

ಈ ಬಗ್ಗೆ ಮಾಹಿತಿ ನೀಡಿರುವ ಪ್ರಸಿದ್ಧ್ ಕೃಷ್ಣ, ಕ್ರಿಕೆಟ್ ಅಂಗಳದಿಂದ ಹೊರಗುಳಿದಿದ್ದಕ್ಕೆ ವಿಷಾದವಿದೆ, ಶೀಘ್ರದಲ್ಲೇ ತಂಡಕ್ಕೆ ಕಂಬ್ಯಾಕ್ ಮಾಡುತ್ತೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಎಂದು ಬರೆದುಕೊಂಡಿದ್ದಾರೆ.

IPL 2022 ರ ಮೆಗಾ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಪ್ರಸಿದ್ಧ್ ಕೃಷ್ಣ ಅವರನ್ನು ಬರೋಬ್ಬರಿ 10 ಕೋಟಿ ರೂ. ನೀಡಿ ಖರೀದಿಸಿತ್ತು. ಅಲ್ಲದೆ ಕಳೆದ ಸೀಸನ್ನಲ್ಲಿ 17 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೃಷ್ಣ 19 ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ರಾಯಲ್ಸ್ ಫೈನಲ್ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ತಂಡದಲ್ಲಿದ್ದ ಪ್ರಮುಖ ಭಾರತೀಯ ವೇಗಿ ಹೊರಗುಳಿಯುತ್ತಿರುವುದು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಅಲ್ಲದೆ ಐಪಿಎಲ್ ಆರಂಭಕ್ಕೂ ಮುನ್ನ ಮತ್ತೋರ್ವ ಭಾರತೀಯ ವೇಗಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಸಂಜು ಸ್ಯಾಮ್ಸನ್ ಬಳಗದ ಮುಂದಿದೆ.

ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆ್ಯಡಂ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜೋ ರೂಟ್, ಜೋ ರೂಟ್ , ಮುರುಗನ್ ಅಶ್ವಿನ್, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕಾರ್ಯಪ್ಪ, ಓಬೇಡ್ ಮೆಕಾಯ್, ರಿಯಾನ್ ಪರಾಗ್, ಕೆಎಂ ಆಸಿಫ್, ಕುಲದೀಪ್ ಸೇನ್, ಡೊನಾವನ್ ಫೆರೇರಾ, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್.