
IPL 2023 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಏಕೆಂದರೆ ಆರ್ಸಿಬಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೂ, 2ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತ್ತು. ಹೀಗಾಗಿ ಮೂರನೇ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ.

ಇದಕ್ಕಾಗಿ ತಂಡದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲಿ ಮುಖ್ಯವಾದ ಬದಲಾವಣೆ ಬೌಲಿಂಗ್ ಲೈನಪ್ನಲ್ಲಿ ಕಂಡು ಬರಬಹುದು. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಕಾಶ್ ದೀಪ್ 3 ಓವರ್ನಲ್ಲಿ 29 ರನ್ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಹಾಗೆಯೇ ಕೆಕೆಆರ್ ವಿರುದ್ಧ 2 ಓವರ್ಗಳಲ್ಲಿ 30 ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಆಕಾಶ್ ದೀಪ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ.

ಇತ್ತ ಆಕಾಶ್ ದೀಪ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಟ್ಟರೆ ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪಟ್ಟಿಯಲ್ಲಿ ಯುವ ವೇಗಿ ವೈಶಾಖ್ ವಿಜಯಕುಮಾರ್ ಹೆಸರು ಕೂಡ ಮುಂಚೂಣಿಯಲ್ಲಿದೆ.

ಇದಕ್ಕೆ ಒಂದು ಕಾರಣ, ವೈಶಾಖ್ ಕರ್ನಾಟಕದ ಬೌಲರ್. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ. ಹೀಗಾಗಿ ತವರು ಮೈದಾನದಲ್ಲಿ ಆರ್ಸಿಬಿ ಕನ್ನಡಿಗನನ್ನು ಕಣಕ್ಕಿಳಿಸಿದರೆ ಅನುಕೂಲ ಹೆಚ್ಚು. ಬೆಂಗಳೂರಿನ ಪಿಚ್ನಲ್ಲಿ ಆಡಿದ ಅನುಭವ ಹೊಂದಿರುವ ವೈಶಾಖ್ ಪರಿಣಾಮಕಾರಿಯಾಗಿ ದಾಳಿ ಸಂಘಟಿಸಬಲ್ಲರು.

ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವೈಶಾಖ್ ವಿಜಯಕುಮಾರ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ. ಇದಾಗ್ಯೂ ತಂಡದಲ್ಲಿ ಅನುಭವಿ ಭಾರತೀಯ ಬೌಲರ್ ಆಗಿ ಸಿದ್ಧಾರ್ಥ್ ಕೌಲ್ ಕೂಡ ಇದ್ದು, ಹೀಗಾಗಿ ಕನ್ನಡಿಗನಿಗೆ ಲಕ್ನೋ ವಿರುದ್ದ ಚಾನ್ಸ್ ಸಿಗಲಿದೆಯಾ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.