IPL 2024: ಬೆಂಗಳೂರಿಗೆ ಸಾಧ್ಯವಿಲ್ಲ… RCB ತಂಡದ ಸೋಲನ್ನು ಸಂಭ್ರಮಿಸಿದ CSK ಬೌಲರ್..!
IPL 2024 RCB vs RR: ಐಪಿಎಲ್ನ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ 4 ವಿಕೆಟ್ಗಳ ಜಯ ಸಾಧಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರಿದೆ. ಇನ್ನು ಈ ಸೋಲಿನೊಂದಿಗೆ ಆರ್ಸಿಬಿ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಿದೆ.
Updated on: May 23, 2024 | 8:30 AM

IPL 2024: ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) ತಂಡ ಜಯ ಸಾಧಿಸಿದೆ. ಅಹಮದಾಬಾದ್ನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ 33 ರನ್ ಬಾರಿಸಿದರೆ, ರಜತ್ ಪಾಟಿದಾರ್ 34 ರನ್ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ ಮಹಿಪಾಲ್ ಲೋಮ್ರರ್ 32 ರನ್ಗಳನ್ನು ಬಾರಿಸಿದರು. ಈ ಮೂಲಕ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಆರ್ಸಿಬಿ ತಂಡ 172 ರನ್ ಕಲೆಹಾಕಿತು.

173 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (45) ಉತ್ತಮ ಆರಂಭ ಒದಗಿಸಿದರು. ಇನ್ನು ಜವಾಬ್ದಾರಿಯುತ ಇನಿಂಗ್ಸ್ ಆಡಿದ ರಿಯಾನ್ ಪರಾಗ್ 36 ರನ್ಗಳ ಕೊಡುಗೆ ನೀಡಿದರು. ಅಂತಿಮ ಹಂತದಲ್ಲಿ ಶಿಮ್ರಾನ್ ಹೆಟ್ಮೆಯರ್ 26 ರನ್ ಬಾರಿಸಿದರೆ, ರೋವ್ಮನ್ ಪೊವೆಲ್ ಬಿರುಸಿನ 16 ರನ್ ಸಿಡಿಸಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಕಳೆದುಕೊಂಡು 19 ಓವರ್ಗಳಲ್ಲಿ ಗೆಲುವಿನ ದಡ ಸೇರಿದರು.

ಈ ಸೋಲಿನೊಂದಿಗೆ ಆರ್ಸಿಬಿ ತಂಡ ಐಪಿಎಲ್ನಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್ ತುಷಾರ್ ದೇಶಪಾಂಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೀಯಾಳಿಸಿ ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಹಾಕಿದ್ದಾರೆ.

ಬೆಂಗಳೂರು ಕಂಟೋನ್ಮೆಂಟ್ ರೈಲ್ವೇ ಸ್ಟೇಷನ್ನ ಫೋಟೋ ಹಾಕಿದ ತುಷಾರ್ ದೇಶಪಾಂಡೆ, ಬೆಂಗಳೂರಿಗೆ ಸಾಧ್ಯವಿಲ್ಲ (Bengaluru Cant.) ಎಂಬಾರ್ಥದಲ್ಲಿ ಟ್ರೋಲ್ ಮಾಡಿದ್ದಾರೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಸಿಎಸ್ಕೆ ಆಟಗಾರ ಈ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.

ಒಬ್ಬ ಕ್ರಿಕೆಟಿಗನಾಗಿ ಮತ್ತೊಂದು ತಂಡದ ಸೋಲನ್ನು ಸಂಭ್ರಮಿಸುವ ನಿನ್ನ ಮನಸ್ಥಿತಿ ಕ್ರೀಡಾ ಕ್ಷೇತ್ರಕ್ಕೆ ಸೂಕ್ತವಲ್ಲ ಎಂದು ಅನೇಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ಇನ್ನು ಕೆಲವರು ಇದು ಸಿಎಸ್ಕೆ ಆಟಗಾರರ ಮನಸ್ಥಿತಿ ಎಂದರೆ, ಮತ್ತೆ ಕೆಲವರು ಒಬ್ಬ ಕ್ರೀಡಾಪಟುವಿನಿಂದ ಇಂತಹದ್ದನ್ನು ಯಾರೂ ಕೂಡ ನಿರೀಕ್ಷಿಸುವುದಿಲ್ಲ. ಇದು ನಿಮಗೆ ಕ್ರೀಡಾ ಸ್ಪೂರ್ತಿ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕಳೆದ ಕೆಲ ಸೀಸನ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ತುಷಾರ್ ದೇಶಪಾಂಡೆ ಈ ಬಾರಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 13 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ತುಷಾರ್ ಒಟ್ಟು 17 ವಿಕೆಟ್ಗಳನ್ನು ಕಬಳಿಸಿ ಮಿಂಚಿದ್ದಾರೆ. ಇದಾಗ್ಯೂ ಆರ್ಸಿಬಿ ತಂಡವನ್ನು ಟ್ರೋಲ್ ಮಾಡಿ ಸುದ್ದಿಯಾಗಿದ್ದು ಮಾತ್ರ ವಿಪರ್ಯಾಸ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




