
ಬಾಂಗ್ಲಾದೇಶ್ ತಂಡದ ಆಟಗಾರ ಮುಸ್ತಫಿಝುರ್ ರೆಹಮಾನ್ನನ್ನು ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಕೈ ಬಿಟ್ಟ ಬೆನ್ನಲ್ಲೇ ಕೌಂಟರ್ ಅಟ್ಯಾಕ್ ನೀಡಲು ಬಾಂಗ್ಲಾದೇಶ್ ಸರ್ಕಾರ ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಬಾಂಗ್ಲಾದೇಶ್ನಲ್ಲಿ ಐಪಿಎಲ್ ಬ್ಯಾನ್ ಮಾಡಲು ಮುಂದಾಗುತ್ತಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ ನಜ್ರುಲ್, ಬಾಂಗ್ಲಾದೇಶ್ ಆಟಗಾರನಿಗೆ ಮಾಡಲಾದ ಅವಮಾನಕ್ಕೆ ಪ್ರತೀಕಾರವಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ ಯಾವುದೇ ಸಂದರ್ಭದಲ್ಲೂ ಬಾಂಗ್ಲಾದೇಶ್, ಬಾಂಗ್ಲಾದೇಶ್ ಕ್ರಿಕೆಟ್ ಅಥವಾ ಬಾಂಗ್ಲಾದೇಶ ಕ್ರಿಕೆಟಿಗರ ಅವಮಾನವನ್ನು ನಾವು ಸಹಿಸುವುದಿಲ್ಲ. ಗುಲಾಮಗಿರಿಯ ದಿನಗಳು ಮುಗಿದಿವೆ. ಹೀಗಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ರಸಾರ ನಿಷೇಧಿಸಲು ಮನವಿ ಸಲ್ಲಿಸಿರುವುದಾಗಿ ಆಸಿಫ್ ನಜ್ರುಲ್ ತಿಳಿಸಿದ್ದಾರೆ.

ಹೀಗಾಗಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನ ಪಂದ್ಯಗಳು ಬಾಂಗ್ಲಾದೇಶ್ನಲ್ಲಿ ಪ್ರಸಾರವಾಗುವ ಸಾಧ್ಯತೆಯಿಲ್ಲ. ಈಗಾಗಲೇ ಐಪಿಎಲ್ ಪಂದ್ಯಗಳಿಗೆ ಪಾಕಿಸ್ತಾನ್ ಸರ್ಕಾರ ನಿಷೇಧ ಹೇರಿದ್ದಾರೆ. ಇತ್ತ ಬಾಂಗ್ಲಾದೇಶ್ ಕೂಡ ಪಾಕ್ ಮಾದರಿಯಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಲೈವ್ ಪ್ರಸಾರಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಹೆಚ್ಚಿದೆ.

ಅಷ್ಟೇ ಅಲ್ಲದೆ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿನ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಹೀಗಾಗಿ ಬಾಂಗ್ಲಾದೇಶ್ ತಂಡದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ.
Published On - 10:54 am, Sun, 4 January 26