
ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ನಡೆಯಲಿರುವ 2 ಪಂದ್ಯಗಳ ಈ ಸರಣಿಗೆ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಿದ್ದಾರೆ. ಆದರೆ ಈ ತಂಡದಲ್ಲಿ ಕನ್ನಡಿಗ ಕರುಣ್ ನಾಯರ್ಗೆ (Karun Nair) ಚಾನ್ಸ್ ಸಿಗುವ ಸಾಧ್ಯತೆಯಿಲ್ಲ..!

ಪ್ರಸ್ತುತ ಮಾಹಿತಿ ಪ್ರಕಾರ, ಬಿಸಿಸಿಐ ಆಯ್ಕೆ ಸಮಿತಿ ಮುಂಬರುವ ಸರಣಿಗೆ ಯುವ ಆಟಗಾರರನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಇದರಿಂದಾಗಿ ಕರುಣ್ ನಾಯರ್ ತಂಡದಿಂದ ಹೊರಬೀಳುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕರುಣ್ ನಾಯರ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಇಂಗ್ಲೆಂಡ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ 6 ಇನಿಂಗ್ಸ್ ಆಡಿದ್ದ ಕರುಣ್ ನಾಯರ್ 249 ಎಸೆತಗಳನ್ನು ಎದುರಿಸಿ ಒಟ್ಟು 131 ರನ್ ಮಾತ್ರ ಕಲೆಹಾಕಿದ್ದರು. ಅಂದರೆ ಕೇವಲ 21.83 ಸರಾಸರಿಯಲ್ಲಿ ರನ್ಗಳಿಸಿದ್ದರಿಂದ ಕರುಣ್ ನಾಯರ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಕೈ ಬಿಡಲಾಗಿತ್ತು.

ಇದಾಗ್ಯೂ ಕರುಣ್ ನಾಯರ್ ಅವರಿಗೆ ಕೊನೆಯ ಟೆಸ್ಟ್ ಪಂದ್ಯದಲ್ಲಿ ಚಾನ್ಸ್ ನೀಡಲಾಗಿತ್ತು. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕರುಣ್ ಮೊದಲ ಇನಿಂಗ್ಸ್ನಲ್ಲಿ 57 ರನ್ ಬಾರಿಸಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ ಕಲೆಹಾಕಿದ್ದು ಕೇವಲ 17 ರನ್ಗಳು ಮಾತ್ರ.

ಅಂದರೆ ಇಂಗ್ಲೆಂಡ್ ವಿರುದ್ಧ 8 ಇನಿಂಗ್ಸ್ ಆಡಿದ್ದ ಕರುಣ್ ನಾಯರ್ ಕಲೆಹಾಕಿರುವುದು ಕೇವಲ 205 ರನ್ಗಳು ಮಾತ್ರ. ಹೀಗಾಗಿಯೇ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕರುಣ್ ಅವರನ್ನು ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಅಲ್ಲದೆ ಅವರ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಯುವ ದಾಂಡಿಗನಿಗೆ ಚಾನ್ಸ್ ನೀಡುವ ಬಗ್ಗೆ ಚರ್ಚಿಸಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕರುಣ್ ನಾಯರ್ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.