
ಸದ್ಯ ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಆಡುತ್ತಿದೆ. ಟಿ20 ಸರಣಿಯ ಕೊನೆಯ ಪಂದ್ಯ ಜನವರಿ 17ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇದಾದ ನಂತರ ತಂಡವು ಜನವರಿ 25 ರಿಂದ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದಕ್ಕಾಗಿ ತಂಡವನ್ನೂ ಸಹ ಪ್ರಕಟಿಸಲಾಗಿದ್ದು, ತಂಡದ ವಿಕೆಟ್ಕೀಪಿಂಗ್ ಜವಬ್ದಾರಿಯನ್ನು ಕನ್ನಡಿಗ ಕೆಎಲ್ ರಾಹುಲ್ ನಿರ್ವಹಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಇಂಜುರಿಯಿಂದ ಚೇತರಿಸಿಕೊಂಡು ತಂಡಕ್ಕೆ ವಾಪಸಾದ ಬಳಿಕ ಕೆಎಲ್ ರಾಹುಲ್ ವಿಭಿನ್ನ ಲಯದಲ್ಲಿ ಕಾಣಿಸಿಕೊಂಡಿದ್ದಾರೆ. 2023 ರ ಏಕದಿನ ವಿಶ್ವಕಪ್ನಲ್ಲಿ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ್ದ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿಯೂ ಶತಕ ಸಿಡಿಸಿದ್ದರು.

ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಅದೇ ಲಯವನ್ನು ಕಾಯ್ದುಕೊಳ್ಳಲು ಬಯಸಿರುವ ರಾಹುಲ್, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ದೇವರ ಆಶೀರ್ವಾದ ಪಡೆಯಲು ಶ್ರೀ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದಿಂದ ಹೊರಗುಳಿದಿರುವ ರಾಹುಲ್ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲ್ಲಿದ್ದು, ಅದಕ್ಕೂ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಯಾವುದೇ ಪೂರ್ವ ಮಾಹಿತಿ ಇಲ್ಲದೆ ದೇವಾಲಯಕ್ಕೆ ಭೇಟಿ ನೀಡಿದ ರಾಹುಲ್ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಇಂದು ಮದ್ಯಾಹ್ನ ಜರುಗಿದ ವಿಶೇಷ ಪೂಜೆಯಲ್ಲಿ ಬಾಗಿಯಾಗಿದ್ದಾರೆ. ಈ ವೇಳೆ ದೇವಸ್ಥಾನದ ಅರ್ಚಕರಿಂದ ರಾಹುಲ್ ಕ್ರಿಕೆಟ್ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಎಂದು ವಿಶೇಷ ಪ್ರಾರ್ಥನೆ ಮಾಡಿದ್ದಾರೆ.

ವಾಸ್ತವವಾಗಿ ಪ್ರಮುಖ ಈವೆಂಟ್ಗಳಿಗೂ ಮುನ್ನ ಕೆಎಲ್ ರಾಹುಲ್ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಇತ್ತೀಚೆಗೆ ಅವರು ಉಡುಪಿಯ ಶ್ರೀ ಮೂಕಾಂಭಿಕಾ ದೇವಸ್ಥಾನಕ್ಕೂ ಭೇಟಿ ನೀಡಿದ್ದರು. ಹಾಗೆಯೇ ಕಳೆದ ವರ್ಷ ಕುಕ್ಕೆ ಸುಭ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.