ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಬಾರ್ಬಡಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಬಿಸಿಸಿಐ ಶಾಕ್ ನೀಡಿದೆ.
ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಸರಣಿಶ್ರೇಷ್ಠ ಪ್ರಶಸ್ತಿ ಬಾಚಿಕೊಂಡ ಮೊಹಮ್ಮದ್ ಸಿರಾಜ್ ಅವರನ್ನು ದಿಢೀರ್ ಆಗಿ ಏಕದಿನ ಸರಣಿಯಿಂದ ಕೈಬಿಡಲಾಗಿದೆ.
ಏಕದಿನ ಸರಣಿಯಿಂದ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ. ಅವರು ತವರಿಗೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳ ತಿಳಿಸಿವೆ. ಸಿರಾಜ್ ಅವರು ಆರ್. ಅಶ್ವಿನ್, ಅಜಿಂಕ್ಯ ರಹಾನೆ, ಕೆಎಸ್ ಭರತ್ ಮತ್ತು ನವ್ದೀಪ್ ಸೈನಿ ಜೊತೆ ಇಂದು ಭಾರತಕ್ಕೆ ಮರಳಲಿದ್ದಾರೆ.
ಅತ್ತ ಮೊಹಮ್ಮದ್ ಶಮಿ ಕೂಡ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಸದ್ಯ ಏಕದಿನ ಸರಣಿಗೆ ವೇಗಿಗಳಾಗಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಜಯದೇವ್ ಉನಾದ್ಕಟ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್ ಮತ್ತು ಉಮ್ರಾನ್ ಮಲಿಕ್ ಮಾತ್ರ ಇದ್ದಾರೆ.
ಸತತವಾಗಿ ಕ್ರಿಕೆಟ್ ಆಡುತ್ತಿರುವುದರಿಂದ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ ಎಂದಿ ಇಎಸ್ಪಿಎನ್ ಕ್ರಿಕ್ ಇನ್ಫೋ ವರದಿ ಮಾಡಿದೆ. ಇವರ ಬದಲಿ ಆಟಗಾರನನ್ನು ಬಿಸಿಸಿಐ ಇನ್ನೂ ಹೆಸರಿಸಿಲ್ಲ.
ವೆಸ್ಟ್ ಇಂಡೀಸ್ ವಿರುದ್ಧದ T20I ಸರಣಿಗೆ ಸಿರಾಜ್ ಆಯ್ಕೆ ಆಗಿರಲಿಲ್ಲ. ಆದರೆ, ಏಕದಿನ ಸರಣಿಯ ಪಟ್ಟಿಯಲ್ಲಿ ಇದ್ದರು. ಆದರೀಗ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಸಿರಾಜ್ ಅವರು ಮಾರ್ಚ್ 2022 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದಲ್ಲಿ ಕೊನೆಯ ಏಕದಿನ ಪಂದ್ಯ ಆಡಿದ್ದರು. ಕಳೆದ 2 ವರ್ಷಗಳಲ್ಲಿ, ಸಿರಾಜ್ 23 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 4.57 ರ ಅತ್ಯುತ್ತಮ ಸರಾಸರಿಯೊಂದಿಗೆ 41 ವಿಕೆಟ್ಗಳನ್ನು ಪಡೆದಿದ್ದಾರೆ. ಈ 41 ರಲ್ಲಿ, 31 ವಿಕೆಟ್ಗಳನ್ನು ಪಡೆದಿರುವುದು ಈ ವರ್ಷ ಎಂಬುದು ವಿಶೇಷ.
ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಅವರ ಅಲಭ್ಯತೆಯಲ್ಲಿ ತಂಡದ ವೇಗದ ಬೌಲಿಂಗ್ ಜವಾಬ್ದಾರಿ ಹೊತ್ತ ಸಿರಾಜ್ ಇಂದು ಟೀಮ್ ಇಂಡಿಯಾದ ಪ್ರಮುಖ ಸದಸ್ಯರಾಗಿದ್ದಾರೆ.