
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಘೋಷಿಸಲಾಗಿದೆ. ಶುಭ್ಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ 7 ಆಟಗಾರರಿಗೆ ಸ್ಥಾನ ಲಭಿಸಿಲ್ಲ. ಅಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಏಳು ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಅದರಂತೆ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ರಿಷಭ್ ಪಂತ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಪಂತ್ ಅಲಭ್ಯರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿರುವ ಪಂತ್ ಇನ್ನೂ ಸಹ ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಮುಂಬರುವ ಸರಣಿಯಿಂದ ಹೊರಗುಳಿದಿದ್ದಾರೆ.

ಕರುಣ್ ನಾಯರ್: ಆಂಗ್ಲರ ವಿರುದ್ಧದ ಸರಣಿಯಲ್ಲಿ 4 ಮ್ಯಾಚ್ ಆಡಿದ್ದ ಕರುಣ್ ನಾಯರ್ಗೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಏಕೆಂದರೆ ಇಂಗ್ಲೆಂಡ್ ವಿರುದ್ಧ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್ಗಳು ಮಾತ್ರ. ಹೀಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

ಶಾರ್ದೂಲ್ ಠಾಕೂರ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಶಾರ್ದೂಲ್ ಠಾಕೂರ್ ಆಲ್ರೌಂಡರ್ ಆಗಿ ಕಣಕ್ಕಿಳಿದಿದ್ದರು. ಇದಾಗ್ಯೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಶಾರ್ದೂಲ್ ಅವರನ್ನು ಹೊರಗಿಡಲಾಗಿದೆ.

ಅಭಿಮನ್ಯು ಈಶ್ವರನ್: ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾದ ಬ್ಯಾಕಪ್ ಓಪನರ್ ಆಗಿ ಕಾಣಿಸಿಕೊಂಡಿದ್ದ ಅಭಿಮನ್ಯು ಈಶ್ವರನ್ ಅವರನ್ನು ಸಹ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

ಆಕಾಶ್ ದೀಪ್: ಆಂಗ್ಲರ ವಿರುದ್ಧದ ಸರಣಿಯಲ್ಲಿ ಆಕಾಶ್ ದೀಪ್ 3 ಪಂದ್ಯಗಳನ್ನಾಡಿದ್ದರು. ಈ ವೇಳೆ ಉತ್ತಮ ದಾಳಿ ಸಂಘಟಿಸಿದ್ದ ಆಕಾಶ್ ಒಟ್ಟು 13 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡದಿರುವುದು ಅಚ್ಚರಿ.

ಅನ್ಶುಲ್ ಕಂಬೋಜ್: ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಅರ್ಷದೀಪ್ ಸಿಂಗ್ ಗಾಯಗೊಂಡ ಕಾರಣ ಯುವ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಲಾಗಿತ್ತು. ಅದರಂತೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕಂಬೋಜ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ.

ಅರ್ಷದೀಪ್ ಸಿಂಗ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹೆಚ್ಚುವರಿ ವೇಗಿಯಾಗಿ ಕಾಣಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಅವರನ್ನು ಈ ಬಾರಿ ಆಯ್ಕೆ ಮಾಡಿಲ್ಲ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದೆ. ಹೀಗಾಗಿ ಅರ್ಷದೀಪ್ ಸಿಂಗ್ಗೆ ಸ್ಥಾನ ಲಭಿಸಿಲ್ಲ.

ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).