ಝಿಂಬಾಬ್ವೆ ಸರಣಿಗೆ ಆಯ್ಕೆಯಾಗಿದ್ದ ಯುವ ಆಲ್ರೌಂಡರ್ ನಿತೀಶ್ ರೆಡ್ಡಿ (Nitish Reddy) ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಗಾಯದ ಕಾರಣ ಅವರನ್ನು ತಂಡದಿಂದ ಕೈ ಬಿಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಈ ಬಾರಿಯ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದ ನಿತೀಶ್ ಅವರನ್ನು ಚೊಚ್ಚಲ ಬಾರಿಗೆ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿತ್ತು.
ಆದರೀಗ ಸರಣಿ ಆರಂಭಕ್ಕೂ ಮುನ್ನವೇ ಗಾಯಗೊಂಡಿರುವ ಕಾರಣ 21 ವರ್ಷದ ನಿತೀಶ್ ರೆಡ್ಡಿ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ. ಅಲ್ಲದೆ ಅವರ ಬದಲಿಗೆ ಎಡಗೈ ದಾಂಡಿಗ ಶಿವಂ ದುಬೆಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ನೀಡಲಾಗಿದೆ. ದುಬೆ ಪ್ರಸ್ತುತ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯುತ್ತಿದ್ದು, ಈ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಝಿಂಬಾಬ್ವೆ ಸರಣಿಗೆ ತೆರಳಲಿದ್ದಾರೆ.
ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿಯು ಜುಲೈ 6 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಟಿ20 ಪಂದ್ಯಗಳನ್ನಾಡಲಾಗುತ್ತಿದ್ದು, ಇದಕ್ಕಾಗಿ ಯುವ ಆಟಗಾರರನ್ನು ಒಳಗೊಂಡ ಭಾರತ ತಂಡವನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ.
ಈ ತಂಡವನ್ನು ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಮುನ್ನಡೆಸಲಿದ್ದು, ಗಿಲ್ ಅವರೊಂದಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಧ್ರುವ್ ಜುರೇಲ್, ತುಷಾರ್ ದೇಶಪಾಂಡೆ ಸೇರಿದಂತೆ ಯುವ ಆಟಗಾರ ಬಳಗ ಕಾಣಿಸಿಕೊಳ್ಳಲಿದೆ. ಅದರಂತೆ ಝಿಂಬಾಬ್ವೆ ಸರಣಿಗೆ ಟೀಮ್ ಇಂಡಿಯಾ ಟಿ20 ತಂಡ ಈ ಕೆಳಗಿನಂತಿದೆ...
ಭಾರತ ಟಿ20 ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಶಿವಂ ದುಬೆ.