
ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ (Shreyas Iyer) ಅವರ ಪರಿಸ್ಥಿತಿ ಗಂಭೀರವಾಗಿದ್ದು, ಹೀಗಾಗಿ ಸಿಡ್ನಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಇದರ ನಡುವೆ ಅಯ್ಯರ್ ಅವರ ಪೋಷಕರು ತುರ್ತು ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲೇ ಸಿಡ್ನಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದ 34ನೇ ಓವರ್ನ 4ನೇ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಚೆಂಡು ಆಕಾಶದತ್ತ ಚಿಮುತ್ತಿದ್ದಂತೆ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.

ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್ ಅವರ ಎಡ ಪೆಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿದೆ. ಇದರಿಂದ ಅವರು ಕೆಲ ಕ್ಷಣಗಳ ಕಾಲ ಅಸ್ವಸ್ಥರಾಗಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ. ಇದೇ ಕಾರಣದಿಂದಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಸಿಸಿಐ ವೈದ್ಯಕೀಯ ತಂಡವು ಸಿಡ್ನಿ ಮತ್ತು ಭಾರತದ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚಿಸಿ ಅವರ ಗಾಯದ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಶ್ರೇಯಸ್ ಅವರ ದೈನಂದಿನ ಪ್ರಗತಿಯನ್ನು ಮೌಲ್ಯಮಾಪನ ಮಾಡಲು ಭಾರತೀಯ ತಂಡದ ವೈದ್ಯರು ಸಿಡ್ನಿಯಲ್ಲಿಯೇ ಇರಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

ಇದಾಗ್ಯೂ ತೀವ್ರ ನಿಗಾದಲ್ಲಿರುವ ಮಗನನ್ನು ನೋಡಲು ಶ್ರೇಯಸ್ ಅಯ್ಯರ್ ಪೋಷಕರು ಆಸ್ಟ್ರೇಲಿಯಾ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದು, ಶ್ರೀಘ್ರದಲ್ಲೇ ಸಿಡ್ನಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಇತ್ತ ಟೀಮ್ ಇಂಡಿಯಾ ಆಟಗಾರನ ಚೇತರಿಕೆಗೆ ಅಭಿಮಾನಿಗಳು ಸೇರಿದಂತೆ ಹಲವರು ಪ್ರಾರ್ಥಿಸಿದ್ದಾರೆ.