ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದಿರುವ ರೋಹಿತ್ ಶರ್ಮಾ ನೇತೃತ್ವದ ಭಾರತ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಣೆಸಾಟ ನಡೆಸಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.
ಆದರೆ, ಈ ರಣರೋಚಕ ಕದನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ಈಗಾಗಲೇ ಹಾರ್ದಿಕ್ ಪಾಂಡ್ಯ ಇಂಜುರಿಯಿಂದಾಗಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ. ಇದೀಗ ಮತ್ತಿಬ್ಬರು ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ.
ಹಾರ್ದಿಕ್ ಜಾಗದಲ್ಲಿ ಇಂದು ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದ್ದ ಸೂರ್ಯಕುಮಾರ್ ಯಾದವ್ ಪಂದ್ಯದ ಹಿಂದಿನ ದಿನ ಅಭ್ಯಾಸದ ವೇಳೆ ಮಣಿಕಟ್ಟಿನ ಗಾಯಕ್ಕೆ ಒಳಗಾಗಿದ್ದಾರೆ. ಸೂರ್ಯ ನೆಟ್ಸ್ನಲ್ಲಿ 'ಥ್ರೋ-ಡೌನ್ ಸ್ಪೆಷಲಿಸ್ಟ್' ರಘು ರಾಘವೇಂದ್ರ ಅವರನ್ನು ಎದುರಿಸುತ್ತಿದ್ದಾಗ ಮಣಿಕಟ್ಟಿಗೆ ಪೆಟ್ಟು ಬಿದ್ದಿದೆ.
ಸೂರ್ಯಕುಮಾರ್ ಯಾದವ್ ಅವರ ಬಲ ಮಣಿಕಟ್ಟಿಗೆ ದೊಡ್ಡ ಪೆಟ್ಟು ಬಿದ್ದಿರುವ ಸಂಭವವಿದ್ದು, ಅಭ್ಯಾಸವನ್ನು ಅರ್ಧಕ್ಕೆ ಬಿಟ್ಟು ಹೊರನಡೆದಿದ್ದಾರೆ. ಹೀಗಾಗಿ ಇವರು ವಿಶ್ವಕಪ್ನ ಇಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ಇವರ ಬದಲು ಇಶಾನ್ ಕಿಶನ್ ಕಣಕ್ಕಿಳಿಯುವ ಸಂಭವವಿದೆ.
ಇನ್ನು ಭಾರತದ ಮತ್ತೊಬ್ಬ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜಡೇಜಾ ಕೆಲವು ತಿಂಗಳ ಹಿಂದೆ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು, ಹೀಗಾಗಿ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿ ಕಮ್ಬ್ಯಾಕ್ ಮಾಡಿದ್ದರು.
ಇದೀಗ ಜಡೇಜಾ ಅವರಿಗೆ ಹಿಂದಿನ ಗಾಯವು ಮತ್ತೆ ತೊಂದರೆಕೊಡುತ್ತಿದೆ. ಬಾಂಗ್ಲಾದೇಶದ ವಿರುದ್ಧದ ಕೊನೆಯ ಪಂದ್ಯದ ವೇಳೆಯೂ ಅವರು ಐಸ್ ಪ್ಯಾಕ್ ಇಡುತ್ತಿರುವುದು ಕಂಡುಬಂದಿತ್ತು. ಆದರೆ, ಇಂದಿನ ಪಂದ್ಯದಿಂದ ಹೊರಗುಳಿಯುವಷ್ಟು ಗಾಯ ತೀವ್ರವಾಗಿದೆಯೇ ಎಂಬುದು ಟಾಸ್ ವೇಳೆ ತಿಳಿಯಬೇಕಿದೆ.
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಲ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.