ಆಗಸ್ಟ್ 30 ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಏಕದಿನ ಏಷ್ಯಾಕಪ್ 2023 ಟೂರ್ನಿಗೆ 17 ಸದಸ್ಯರ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸೋಮವಾರ ದೆಹಲಿಯಲ್ಲಿ ಅಜಿತ್ ಅಗರ್ಕರ್ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಭಾರತ ತಂಡವನ್ನು ಹೆಸರಿಸಲಾಯಿತು.
ಭಾರತ ತಂಡದ ನಾಯಕತ್ವ ರೋಹಿತ್ ಶರ್ಮಾ ವಹಿಸಿಕೊಂಡರೆ, ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲ್ಲಿದ್ದಾರೆ. ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಏಷ್ಯಾಕಪ್ ಮೂಲಕ ಟೀಮ್ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ, ಕೆಲ ಆಟಗಾರರು ಕೈಬಿಡಲಾಗಿದೆ.
ಅಚ್ಚರಿ ಎಂಬಂತೆ ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಶಿಖರ್ ಧವನ್, ಆರ್. ಅಶ್ವಿನ್, ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಏಷ್ಯಾಕಪ್ ತಂಡದಿಂದ ಕೈಬಿಡಲಾಗಿದೆ. ಆದರೆ ಕೇವಲ 8 ಟಿ20 ಪಂದ್ಯಗಳನ್ನಾಡಿರುವ ಹಾಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ ಅನುಭವ ಹೊಂದಿರದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ಅವಕಾಶ ನೀಡಲಾಗಿದೆ.
17 ಸದಸ್ಯರಿರುವ ತಂಡದಲ್ಲಿ ಈಗ ಆಡುವ 11 ಆಟಗಾರರನ್ನು ಆಯ್ಕೆ ಮಾಡುವುದೇ ಟೀಮ್ ಇಂಡಿಯಾಕ್ಕೆ ಇರುವ ದೊಡ್ಡ ಸವಾಲು. ಸಂಪೂರ್ಣ ಫಿಟ್ನೆಸ್ ಹೊಂದಿಲ್ಲದ ಕಾರಣ ಕೆಎಲ್ ರಾಹುಲ್ ಆರಂಭದ ಕೆಲ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಖುದ್ದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಿಳಿಸಿದ್ದಾರೆ.
ನಾಯಕ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ರಾಹುಲ್ ಆಡದಿದ್ದರೆ ಇಶಾನ್ ಕಿಶನ್ ಓಪನರ್ ಆಗಿ ಆಡುತ್ತಾರೆ. ಈ ಸಂದರ್ಭ ವಿರಾಟ್ ಕೊಹ್ಲಿ ತಮ್ಮ ಮೂರನೇ ಕ್ರಮಾಂಕವನ್ನು ಶುಭಮನ್ ಗಿಲ್ಗೆ ತ್ಯಾಗ ಮಾಡಬೇಕು. ಕೊಹ್ಲಿ ನಾಲ್ಕನೇ ಸ್ಥಾನದಲ್ಲಿ ಆಡಿದರೆ ನಂತರದಲ್ಲಿ ಕಣಕ್ಕಿಳಿಯಲಿದ್ದಾರೆ.
ಐದನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಿದರೆ ಆಲ್ರೌಂಡರ್ ಜವಾಬ್ದಾರಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ವಹಿಸಲಿದ್ದಾರೆ. ಜೊತೆಗೆ ಶಾರ್ದೂಲ್ ಠಾಕೂರ್ ಕೂಡ ಇರಲಿದ್ದಾರೆ. ಕುಲ್ದೀಪ್ ಯಾದವ್ ಯಾದವ್ ಸ್ಪಿನ್ ಆಯ್ಕೆ ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಪ್ರಮುಖ ವೇಗಿಗಳಾಗಿದ್ದಾರೆ.
ಏಷ್ಯಾಕಪ್ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ , ಮೊಹಮ್ಮದ್ ಸಿರಾಜ್.
ಏಷ್ಯಾಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).