
ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಿದರೆ, ಉಪನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಕರ್ನಾಟಕದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಮತ್ತಿಬ್ಬರು ಹೊರಬಿದ್ದಿದ್ದಾರೆ.

ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕರ್ನಾಟಕದ ಮೂವರು ಆಟಗಾರರು ಕಾಣಿಸಿಕೊಂಡಿದ್ದರು. ಆದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಸ್ಥಾನ ನೀಡಲಾಗಿಲ್ಲ. ಬದಲಾಗಿ ಆಕಾಶ್ ದೀಪ್ ಅವರನ್ನು ವೇಗದ ಬೌಲರ್ ಆಗಿ ಆಯ್ಕೆ ಮಾಡಲಾಗಿದೆ.

ಹಾಗೆಯೇ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದ ಕರುಣ್ ನಾಯರ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹೊರಗಿಡಲಾಗಿತ್ತು. ಇದಾಗ್ಯೂ ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಕಾರಣ ಅವರು ಮತ್ತೆ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಅವರನ್ನು ಕೈ ಬಿಡಲಾಗಿದೆ.

ಇನ್ನು ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾದ ಕನ್ನಡಿಗರೆಂದರೆ ಕೆಎಲ್ ರಾಹುಲ್ ಹಾಗೂ ದೇವದತ್ ಪಡಿಕ್ಕಲ್. ಕೆಎಲ್ ರಾಹುಲ್ ಆರಂಭಿಕನಾಗಿ ಸ್ಥಾನ ಪಡೆದರೆ, ದೇವದತ್ ಪಡಿಕ್ಕಲ್ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಭಾರತ ಟೆಸ್ಟ್ ತಂಡ : ಶುಭ್ಮನ್ ಗಿಲ್ (ನಾಯಕ), ರಿಷಬ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಕುಲ್ದೀಪ್ ಯಾದವ್.