
ಕಾಂಗ್ರೆಸ್ನ ಟ್ರಬಲ್ ಶೂಟರ್, ರಾಜ್ಯದ ಪ್ರಮುಖ ಒಕ್ಕಲಿಗ ನಾಯಕ, ಡಿಕೆ ಶಿವಕುಮಾರ್ ಇದೀಗ ಕರುನಾಡಿನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಲೋಕಭವನದಲ್ಲಿ ನೂತನ ಸಿಎಂ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.

ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಡಾ. ಪರಮೇಶ್ವರ್ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿದ್ದರು.

ಕೆ.ಎಚ್. ಮುನಿಯಪ್ಪ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 74 ವರ್ಷದ ಕೆ.ಹೆಚ್.ಮುನಿಯಪ್ಪ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಮತ್ತೊಮ್ಮೆ ಸಚಿವ ಸ್ಥಾನ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಇನ್ನು 76 ವರ್ಷದ ಕೆ.ಜೆ.ಜಾರ್ಜ್ ದೇವರ ಹೆಸರಿನಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿರುವ ಕೆ.ಜೆ.ಜಾರ್ಜ್ ಲೋಕಭವನದ ಗಾಜಿನಮನೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಶಾಸಕರಾಗಿರುವ ಎಂ.ಬಿ.ಪಾಟೀಲ್, ವಿಶ್ವಗುರು ಬಸವಣ್ಣ, ಬಸವಾದಿ ಶರಣರು, ಸಿದ್ದೇಶ್ವರಶ್ರೀ ಹೆಸರಿನಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬಿಟಿಎಂ ಲೇಔಟ್ ಶಾಸಕ 72 ವರ್ಷದ ರಾಮಲಿಂಗಾರೆಡ್ಡಿಗೆ ಮತ್ತೊಮ್ಮೆ ಸಚಿವ ಸ್ಥಾನ ಲಭಿಸಿದೆ.

ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಶಾಸಕರಾಗಿರುವ ಸತೀಶ್ ಜಾರಕಿಹೊಳಿ ಸಂಪುಟ ದರ್ಜೆ ಸಚಿವರಾಗಿ ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದರು.

53 ವರ್ಷದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಕೂಡ ಡಿಕೆ ಶಿವಕುಮಾರ್ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರವಹಿಸಿಕೊಂಡರು. ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡಿದರು.

ಇನ್ನು ಯು.ಟಿ.ಖಾದರ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರಿಸಿದ್ದು, ಯತೀಂದ್ರ ಸಿದ್ದರಾಮಯ್ಯ ಸಂವಿಧಾನದ ಹೆಸರಿನಲ್ಲಿ ಅಧಿಕಾರ ವಹಿಸಿಕೊಂಡರು.

ಈಶ್ವರ್ ಖಂಡ್ರೆ ಚನ್ನಬಸವ ಪಟ್ಟ ದೇವರ ಹೆಸರಿನಲ್ಲಿ ಮಂತ್ರಿಗಿರಿ ಪಡೆದರೆ, ಭೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ ದೇವರ ಹೆಸರಿನಲ್ಲಿ ಸಚಿವ ಸ್ಥಾನದ ಗದ್ದುಗೆಗೆ ಏರಿದರು.
Published On - 6:22 pm, Wed, 3 June 26