‘ಘೋಸ್ಟ್’ ಚಿತ್ರವು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಆಗುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರ ಶೂಟಿಂಗ್ ಭರದಿಂದ ಸಾಗುತ್ತಿದೆ.
ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್. ನಿರ್ಮಿಸುತ್ತಿರುವ ‘ಘೋಸ್ಟ್’ ಚಿತ್ರಕ್ಕೆ ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆ ಹಿಂದೆ ಕೆಲಸ ಮಾಡುತ್ತಿದ್ದಾರೆ.
‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಅವರು ನಾಯಕರಾಗಿ ಅಭಿನಯಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್ ಮೈದಾನದಲ್ಲಿ ನಡೆಯುತ್ತಿದೆ. ವಿಶೇಷ ದೃಶ್ಯಗಳಿಗಾಗಿ ಅದ್ದೂರಿ ಸೆಟ್ ಹಾಕಲಾಗಿದೆ.
ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ನೂತನ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ. ಚಿತ್ರತಂಡದವರ ಜೊತೆ ಸ್ವಲ್ಪ ಸಮಯ ಮಾತುಕತೆ ನಡೆಸಿದ್ದ ಸಚಿವರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಶಿವರಾಜ್ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು. ಈಗ ಮಧು ಶಿಕ್ಷಣ ಸಚಿವರಾಗಿರುವುದು ಶಿವಣ್ಣ ಅವರ ಕುಟುಂಬಕ್ಕೆ ಸಂತಸ ತಂದಿದೆ.