
ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಿತು.

ಇಂದು(ಡಿಸೆಂಬರ್ 05) ರಾಷ್ಟ್ರಪತಿ ಭವನದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಜಿ20 ಅಧ್ಯಕ್ಷ ಸ್ಥಾನಕ್ಕೆ ಇಡೀ ಜಗತ್ತಿಗೆ ದೇಶದ ಶಕ್ತಿ, ಸಾಮರ್ಥ್ಯ ಪ್ರದರ್ಶಿಸಲು ಇದೊಂದು ಸುವರ್ಣವಕಾಶ ಎಂದು ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ನಾಯಕರ ಸಹಕಾರ ಕೇಳಿದರು.

ಈ ತಿಂಗಳ ಆರಂಭದಲ್ಲಿ ಜಿ20 ಆತಿಥ್ಯ ಭಾರತಕ್ಕೆ ದೊರಕಿದ್ದು, ಮುಂದಿನ ವರ್ಷ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಸಂಬಂಧಪಟ್ಟಂತೆ ಚರ್ಚಿಸಲು, ಸಲಹೆಗಳನ್ನು ನೀಡಲು ಎಲ್ಲಾ ನಾಯಕರ ಬಳಿ ಸಹಕಾರ ಕೋರಿದರು.

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಈ ವರ್ಷ ಆಯೋಜಿಸಲಿರುವ ಸಭೆಗಳು, ಕಾರ್ಯಕ್ರಮಗಳ ಕುರಿತು ರೂಪುರೇಷೆ ರಚಿಸಲು ಸರ್ವ ಪಕ್ಷ ಸಭೆ ಆಹ್ವಾನಿಸಲಾಗಿತ್ತು.

ಈ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪಿಪಿಟಿ ಮೂಲಕ ಕಾರ್ಯಕ್ರಮಗಳ ವಿವರಗಳನ್ನು ಹೇಳಿದೆ.

ವಿಶೇಷ ಅಂದರೆ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.
Published On - 11:57 pm, Mon, 5 December 22