
ಸಿಎಂ ಡಿಕೆ ಶಿವಕುಮಾರ್ ಕ್ಯಾಬಿನೆಟ್ ಫೈನಲ್ ಆಗ್ತಿದ್ದಂತೆಯೇ ಇಂದೇ ನೂತನ ಸಚಿವರು ಪ್ರಯಾಣವಚನ ಸ್ವೀಕರಿಸಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಸಮಾರಂಭ ನಡೆದಿದ್ದು, 19 ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಐದು ಬಾರಿ ಶಾಸಕರಾಗಿ ಗೆದ್ದಿರುವ ಹೆಚ್.ಸಿ.ಬಾಲಕೃಷ್ಣಗೆ ಮೊದಲ ಬಾರಿಗೆ ಸಚಿವ ಸ್ಥಾನ ಲಭಿಸಿದೆ. ಪಂಚೆ, ಶಲ್ಯ ಧರಿಸಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಸಿಎಂ ಡಿಕೆ ಶವಕುಮಾರ್ ಕಾಲಿಗೆ ನಮಸ್ಕರಿಸಿದರು.

ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಪುತ್ರ ಡಾ. ಅಜಯ್ ಸಿಂಗ್ಗೆ ಸಚಿವ ಸ್ಥಾನ ಒಲಿದಿದೆ. ಸಚಿವರಾಗಿ ಜೇವರ್ಗಿ ಶಾಸಕ ಡಾ. ಅಜಯ್ ಧರ್ಮಸಿಂಗ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಸಿಎಂ ಕಾಲು ಮುಟ್ಟಿ ನಮಸ್ಕರಿಸಿದರು.

ಆರು ಬಾರಿ ಶಾಸಕರಾಗಿರುವ ಬಸವರಾಜ ರಾಯರೆಡ್ಡಿಗೆ ಸಚಿವ ಸ್ಥಾನ ಒಲಿದಿದ್ದು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದ ಶಾಸಕರಾಗಿರುವ ಲಕ್ಷ್ಮಣ ಸವದಿ ಕೂಡ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬಂಜಾರ ಸಮುದಾಯದ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಒಲಿಸಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಧಾರವಾಡ ಜಿಲ್ಲೆ ಕಲಘಟಗಿ ಕ್ಷೇತ್ರದ ಶಾಸಕರಾಗಿರುವ ಸಂತೋಷ್ ಲಾಡ್ ಶ್ರದ್ಧಾಪೂರ್ವಕವಾಗಿ ಪ್ರಮಾಣ ಮಾಡುವುದಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಮಂಡ್ಯದ ನಾಗಮಂಗಲದ ಎನ್.ಚಲುವರಾಯಸ್ವಾಮಿ, ಈಗ ನಾಲ್ಕನೇ ಬಾರಿಗೆ ಸಚಿವರಾಗಿದ್ದಾರೆ. ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಅದೇ ರೀತಿಯಾಗಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾಗಿರುವ S.S.ಮಲ್ಲಿಕಾರ್ಜುನ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಿದ್ದರಾಮಯ್ಯ ಸಂಪುಟದಲ್ಲಿ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರಗೆ ಮತ್ತೆ ಅವಕಾಶ ನೀಡಲಾಗಿದ್ದು, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಸಿಎಂ ಮತ್ತು ಡಿಸಿಎಂ ಇಬ್ಬರ ಕಾಲಿಗೆ ನಮಸ್ಕರಿಸಿದರು. ಇನ್ನು ಸಚಿವರಾಗಿ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಚಿವರಾಗಿ ಸೊರಬ ಶಾಸಕ ಮಧು ಬಂಗಾರಪ್ಪ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜೊತೆಗೆ ಶಾಸಕ ಪಿಎಂ ನರೇಂದ್ರಸ್ವಾಮಿ ಅವರು ಅಂಬೇಡ್ಕರ್, ಗಂಗಾಧರ ಅಜ್ಜ ಮತ್ತು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಶಾಸಕರಾಗಿರುವ ಟಿ.ರಘುಮೂರ್ತಿ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಶಾಸಕರಾಗಿರುವ ರಿಜ್ವಾನ್ ಅರ್ಷದ್ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಶಾಸಕರಾಗಿರುವ ಕೆ.ಎಂ.ಶಿವಲಿಂಗೇಗೌಡ ಮತ್ತು ಶಾಸಕ ಶಿವರಾಜ ತಂಗಡಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಸಚಿವರಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಬುದ್ದ, ಬಸವ, ಅಂಬೇಡ್ಕರ್ ಸೇರಿದಂತೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಇಂಗ್ಲಿಷ್ನಲ್ಲಿ ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
Published On - 6:56 pm, Mon, 3 August 26