- Kannada News Photo gallery Karnataka DCM DK Shivakumar meets BJP veteron BS Yediyurappa what is the political calculation behind this
ರಾಜ್ಯ ರಾಜಕಾರಣದಲ್ಲೊಂದು ಅಚ್ಚರಿಯ ಬೆಳವಣಿಗೆ; ಡಿಕೆ ಶಿವಕುಮಾರ್, ಯಡಿಯೂರಪ್ಪ ಭೇಟಿಯ ಗುಟ್ಟೇನು?
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ಸೌಜನ್ಯದ ಭೇಟಿ ಎಂದು ಹೇಳಲಾಗಿದ್ದರೂ ರಾಜಕೀಯ ಪಡಸಾಲೆಯಲ್ಲಿ ಅನೇಕ ರೀತಿಯ ಚರ್ಚೆಗೆ ಕಾರಣವಾಗಿದೆ.
Updated on: Jun 01, 2023 | 10:55 PM

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೆಲ ಕಾಲ ಅವರ ಜತೆ ಮಾತುಕತೆ ನಡೆಸಿದರು.

ಸ್ವತಃ ಯಡಿಯೂರಪ್ಪ ಅವರೇ ಹೊರ ಬಂದು ಡಿಕೆ ಶಿವಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಉಭಯ ನಾಯಕರು ತುಸು ಹೊತ್ತು ಕುಶಲೋಪರಿ ಮಾತನಾಡಿದರು. ಬಳಿಕ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಈಗಾಗಲೇ ಬಿಬಿಎಂಪಿ ಅಧಿಕಾರಿಗಳ ಜತೆ ಕೆಲವು ಸುತ್ತಿನ ಸಭೆ ನಡೆಸಿದ್ದು, ರಾಜ್ಯ ರಾಜಧಾನಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು, ಅಭಿವೃದ್ಧಿ ವಿಷಯವಾಗಿ ಸಲಹೆ ಕೇಳಿರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಚುನಾವಣಾಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳ ಜಾರಿಯೂ ಆಡಳಿತ ಪಕ್ಷಕ್ಕೀಗ ಸವಾಲಾಗಿ ಪರಿಣಮಿಸಿದೆ. ಗ್ಯಾರಂಟಿ ಜಾರಿ ಸಂಬಂಧಿತ ಹಲವು ಸುತ್ತಿನ ಸಭೆಗಳ ಬಳಿಕ ಡಿಕೆಶಿ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿರುವುದು ಗಮನಾರ್ಹವಾಗಿದೆ.

ಬಿಬಿಎಂಪಿಗೆ ಚುನಾವಣೆಯೂ ನಡೆಯಬೇಕಿದೆ. ಆದಷ್ಟು ಬೇಗ ಚುನಾವಣೆ ನಡೆಸಲಾಗುವುದು ಎಂದು ಆಡಳಿತ ಪಕ್ಷ ಹೇಳಿದೆ. ಆದಾಗ್ಯೂ, ವಾರ್ಡ್ ವಿಂಗಡಣೆ ಬಗ್ಗೆ ಕಾಂಗ್ರೆಸ್ ಒಲವು ಹೊಂದಿದೆ ಎನ್ನಲಾಗಿದ್ದು, ಇದರಿಂದಾಗಿ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯೂ ಇದೆ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದರೆ ಭೇಟಿಯ ಪ್ರಮುಖ ಉದ್ದೇಶ ಏನೆಂದು ಇನ್ನೂ ತಿಳಿದುಬಂದಿಲ್ಲ. ಸೌಜನ್ಯದ ಭೇಟಿ ಎಂದಷ್ಟೇ ಹೇಳಲಾಗಿದ್ದರೂ ಇದರ ಹಿಂದೆ ರಾಜಕೀಯ ಲೆಕ್ಕಾಚಾರಗಳಿರುವ ಸಾಧ್ಯತೆ ಇದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.




