ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ ನೀಡಲು ರಾಜ್ಯ ಸರ್ಕಾರ ಶಿಫಾರಸು
ಸಂಪುಟ ಸಭೆ ಬಳಿಕ ಕೆಲವು ಮಹತ್ವದ ಘೋಷಣೆಗಳನ್ನು ಇಂದು (ಸೆಪ್ಟೆಂಬರ್ 11) ಮಾಡಲಾಯಿತು. ಸಾಹಿತಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಷ್ಣುವರ್ಧನ್, ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.
Updated on: Sep 11, 2025 | 8:26 PM

ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಓದುಗರು ಮತ್ತು ಅಭಿಮಾನಿಗಳ ಆಸೆ. ಆ ಬಗ್ಗೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ಅವರು ತಿಳಿಸಿದ್ದಾರೆ.

ಮರಣೋತ್ತರವಾಗಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಮೊದಲೇ ಹಿರಿಯ ಸಾಹಿತಿಗಳು ಮನವಿ ಸಲ್ಲಿಸಿದ್ದರು.

ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕ ರತ್ನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಅವರಿಗೆ ಸಂದಿವೆ.

ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕುಟುಂಬದವರು ಹಾಗೂ ಅಭಿಮಾನಿಗಳು ಮನವಿ ಮಾಡಿದ್ದರು. ಆ ಬೆನ್ನಲ್ಲೇ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ.




