
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕೇಂದ್ರ ನಾಯಕರ ಪ್ರಚಾರ ಅಭಿಯಾನ ಚುರುಕುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡಿದ್ದು, ಮತ್ತೆ ಇನ್ನೊಂದು ಹಂತದ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ. ಅದೇ ರೀತಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಮತ್ತೆ ರಾಜ್ಯಕ್ಕೆ ಬರಲಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯ ಕೇಂದ್ರ ನಾಯಕರ ಚುನಾವಣಾ ಪ್ರಚಾರದ ವಿವರ ಇಲ್ಲಿದೆ.

ಏಪ್ರಿಲ್ 20ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಎರಡು ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಆ ನಂತರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 23, 24ರಂದು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಏ. 23ರಂದು ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ಯಶವಂತಪುರ, ಯಲಹಂಕ, ಮಹದೇವಪುರದಲ್ಲಿ ಱಲಿ, ಬೊಮ್ಮನಹಳ್ಳಿಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಏಪ್ರಿಲ್ 24ರಂದು ಅಮಿತ್ ಶಾ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಪರ ಮತಯಾಚಿಸಲಿದ್ದಾರೆ. ಬಳಿಕ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು, ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಏಪ್ರಿಲ್ 21 ರಂದು ರಾಜ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು 24 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 24ರಂದು ರಾಜ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಸಿಎಂ ಯೋಗಿ ರೋಡ್ಶೋ ನಡೆಸಲಿದ್ದಾರೆ. ನಂತರ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ ಹಾಗೂ ಉಡುಪಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಏಪ್ರಿಲ್ 21 ಮತ್ತು ಏಪ್ರಿಲ್ 28 ರಂದು ರಾಜ್ಯದಲ್ಲಿ ಬಿಜೆಪಿ ವಿಶೇಷ ಚುನಾವಣಾ ಪ್ರಚಾರ ಅಭಿಯಾನ ನಡೆಸಲಿದೆ. ಪ್ರಧಾನಿ ಮೋದಿ ಪರ ತಮ್ಮ ಕಾರ್ಯಸ್ಥಳದ ಸುತ್ತಮುತ್ತ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 21 ರಂದು ಭಾನುವಾರ 15 ಲಕ್ಷ ಬಿಜೆಪಿ ಕಾರ್ಯಕರ್ತರನ್ನು ಅಭಿಯಾನದಲ್ಲಿ ತೊಡಗಿಸಲು ಬಿಜೆಪಿ ಸಿದ್ದತೆ ಮಾಡಿದೆ. ‘ನಾವು ಮೋದಿ ಪರಿವಾರ, ಮೋದಿಗಾಗಿ ಈ ಭಾನುವಾರ’ ಘೋಷವಾಕ್ಯದಡಿ ಬಿಜೆಪಿ ಚುನಾವಣಾ ಅಭಿಯಾನ ನಡೆಯಲಿದೆ.