ಎಸ್ಎಂ ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. 1932 ರಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿ (ಆಗಿನ ಮೈಸೂರು ರಾಜ್ಯ) ಅವರು ಜನಿಸಿದ್ದರು.
ಎಸ್ಎಂ ಕೃಷ್ಣ ಅವರು ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕದ ಸಿಎಂ ಆಗಿದ್ದರು. ಬಳಿಕ 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿದ್ದರು. ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಎಸ್ಎಂ ಕೃಷ್ಣ ಸಿಎಂ ಆಗಿದ್ದಾಗ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.
ಎಸ್ಎಂ ಕೃಷ್ಣ ಕರ್ನಾಟಕದ ಅತ್ಯಂತ ಪ್ರಭಾವಿ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬಳಿಕ ರಾಜಕೀಯ ತಿರುವುಗಳಿಂದಾಗಿ ಅವರು ಬಿಜೆಪಿ ಸೇರ್ಪಡೆಗೊಂಡರು.
ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023 ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.
ಪಾಂಚಜನ್ಯ ಯಾತ್ರೆ ಮಾಡುವ ಮೂಲಕ ಕರ್ನಾಟಕದ ಮುಖ್ಯಮಂತ್ರಿಯಾದ ಎಸ್ಎಂಕೃಷ್ಣ ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ.
ಬೆಂಗಳೂರನ್ನು ಐಟಿ-ಬಿಟಿ ಹಬ್ ಆಗಿ ಮಾಡಲು ಇವರು ಪ್ರಮುಖ ಪಾತ್ರವಹಿಸಿದ್ದರು. ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಇತರ ಅನೇಕ ನಾಗರಿಕ ಸ್ನೇಹಿ ಉಪಕ್ರಮಗಳೊಂದಿಗೆ ವಿದ್ಯುತ್ ಸುಧಾರಣೆಗಳನ್ನು ರಚಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಅಷ್ಟೇ ಅಲ್ಲದೆ ಡಾ. ರಾಜ್ ಕುಮಾರ ಅವರನ್ನು ವೀರಪ್ಪನ್ನಿಂದ ಬಿಡಿಸಿಕೊಂಡು ಬರುವಲ್ಲಿ ಕೂಡ ಎಸ್ಎಂ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದರು.
Published On - 6:33 am, Tue, 10 December 24