
ಕರ್ನಾಟಕ ರಾಜ್ಯದ ಸಂಜೀವಿನಿ ಸ್ವ ಸಹಾಯ ಗುಂಪಿನ 31 ಬುಡಕಟ್ಟು ಜನಾಂಗದ ಮಹಿಳೆಯರು ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.

ರಾಜ್ಯದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ 31 ಬುಡಕಟ್ಟು ಜನಾಂಗದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸಂವಾದ ನಡೆಸಿದರು.

ಈ ಸಂವಾದ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ವಾರಿಜ, ಅಮಿತ ಮತ್ತು ಕೊಳ್ನಾಡು ನೇತ್ರಾವತಿ ಈ ಮೂವರು ಮಹಿಳೆಯರು ಆಯ್ಕೆಯಾಗಿದ್ದರು.

ಅಧ್ಯಕ್ಷ ದ್ರೌಪದಿ ಮುರ್ಮು ಅವರ ವಿಶೇಷ ಆಹ್ವಾನದ ಮೇರೆಗೆ ದೇಶಾದ್ಯಂತದ ಬುಡಕಟ್ಟು ಸಮುದಾಯಗಳು ಸೇರಿದಂತೆ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಆಹ್ವಾನ ನೀಡಲಾಗಿತ್ತು. ರಾಷ್ಟ್ರಪತಿಗಳು ಅವರನ್ನು ರಾಷ್ಟ್ರಪತಿ ಭವನಕ್ಕೆ ಸ್ವಾಗತಿಸಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು.

ಕರ್ನಾಟಕ ಸೇರಿದಂತೆ ದೇಶಾದ್ಯಂತದ ಬುಡಕಟ್ಟು ಸಮುದಾಯಗಳ ಮಹಿಳೆಯರು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಕಾತರರಾಗಿದ್ದರು.