Sriramulu: ರಾಜಕೀಯದಲ್ಲಿ ಸ್ನೇಹ ಪರಿಗಣಿಸಲ್ಲ; ಜನಾರ್ದನ ರೆಡ್ಡಿ ಪಕ್ಷದ ಬಗ್ಗೆ ಶ್ರೀರಾಮುಲು

ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ಡ್ರಾಮಾ ಆರಂಭಿಸಿದ್ದು, ಅದೊಂದು ಡ್ರಾಮಾ ಕಂಪನಿ. ಬಜೆಟ್ ಜನರಿಗೆ ತಲುಪದಂತೆ ಮಾಡಬೇಕೆನ್ನುವದು ಕಾಂಗ್ರೆಸ್ ಉದ್ದೇಶ. ಅದು ಈಡೇರದು. ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

Sriramulu: ರಾಜಕೀಯದಲ್ಲಿ ಸ್ನೇಹ ಪರಿಗಣಿಸಲ್ಲ; ಜನಾರ್ದನ ರೆಡ್ಡಿ ಪಕ್ಷದ ಬಗ್ಗೆ ಶ್ರೀರಾಮುಲು
ಬಿ ಶ್ರೀರಾಮುಲು

Updated on: Feb 18, 2023 | 3:13 PM

ಬಳ್ಳಾರಿ: ರಾಜಕೀಯದಲ್ಲಿ ಸ್ನೇಹವನ್ನು ಪರಿಗಣಿಸುವುದಿಲ್ಲ. ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತೇವೆ ಎಂದು ಸಚಿವ ಬಿ. ಶ್ರೀರಾಮುಲು (B Sriramulu) ಹೇಳಿದ್ದಾರೆ. ಜನಾರ್ದನ ರೆಡ್ಡಿ (Janardhan Reddy) ಹೊಸ ಪಕ್ಷ ಸ್ಥಾಪಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜಕೀಯ ಮತ್ತು ಸ್ನೇಹವನ್ನು ಒಂದೇ ತಕ್ಕಡಿಯಲ್ಲಿ ಇಟ್ಟುಕೊಳ್ಳುವುದಿಲ್ಲ. ರಾಜಕೀಯ ವಿಷಯದಲ್ಲಿ ನನ್ನದೇ ಆದ ಹೋರಾಟ ಇರುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಬಿಜೆಪಿ (BJP) ಶಾಸಕರನ್ನು ಗೆಲಿಸುವುದು ನನ್ನ ಉದ್ದೇಶ. ಈ ವಿಷಯದಲ್ಲಿ ರಾಜಕೀಯವೇ ಮುಖ್ಯ ಸ್ನೆಹವಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮದೇನಿದ್ದರೂ ಬಿಜೆಪಿ ಗೆಲುವಿನ ಯತ್ನ. ಸೋಮಶೇಖರ ರೆಡ್ಡಿ ಅವರ ಸ್ಪರ್ಧೆ ಬಗ್ಗೆ ಅನುಮಾನ ಬೇಡ. ಬಳ್ಳಾರಿ ನಗರದಿಂದಲೇ ಸ್ಪರ್ಧೆ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಮಾಡಿದ ನಂತರ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಬಳ್ಳಾರಿ ಗ್ರಾಮೀಣ ಮತ್ತು ಸಂಡೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಬಯಸಿದ್ದೇನೆ ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.

ಫೆ. 23ಕ್ಕೆ ಸಂಡೂರಿಗೆ ಅಮಿತ್ ಶಾ

ಫೆಬ್ರವರಿ 23ಕ್ಕೆ ಸಂಡೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಂಡೂರಿನಲ್ಲಿ ಸಾರ್ವಜನಿಕ ಸಮಾವೇಶ ಹಾಗೂ ತೋರಣಗಲ್​ನಲ್ಲಿ ನಾಲ್ಕು ಜಿಲ್ಲೆ ಬಿಜೆಪಿ ಮುಖಂಡರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

ಕಾಂಗ್ರೆಸ್ ‘ಹೂ’ ಅಭಿಯಾನದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಿಲ್ಲ. ಅಭಿವೃದ್ಧಿಯ ಬಜೆಟ್ ಮಂಡನೆ ಮಾಡಲಾಗಿದೆ. ವಿಪಕ್ಷ ನಾಯಕರು ಬಜೆಟ್ ವೇಳೆ ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದಿದ್ದರು. ಶಿಷ್ಟಾಚಾರ ಪಾಲಿಸದೆ ಅಗೌರವ ತೋರುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ ನಾಯಕರು ಪ್ರಚಾರಕ್ಕಾಗಿ ಡ್ರಾಮಾ ಆರಂಭಿಸಿದ್ದು, ಅದೊಂದು ಡ್ರಾಮಾ ಕಂಪನಿ. ಬಜೆಟ್ ಜನರಿಗೆ ತಲುಪದಂತೆ ಮಾಡಬೇಕೆನ್ನುವದು ಕಾಂಗ್ರೆಸ್ ಉದ್ದೇಶ. ಅದು ಈಡೇರದು. ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Sat, 18 February 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us