ಗೋಹತ್ಯೆ ನಿಷೇಧ ಕಾಯ್ದೆ ವಾಪಸ್​ ಕಿಚ್ಚು: ಕಾಂಗ್ರೆಸ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು

ಸಚಿವ ಕೆ. ವೆಂಕಟೇಶ್​ ಹೇಳಿಕೆಗೆ ಪ್ರತಿಯೊಬ್ಬರು ತಿರುಗೇಟು ನೀಡುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿದೆ.

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್​ ಕಿಚ್ಚು: ಕಾಂಗ್ರೆಸ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು
ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು

Updated on: Jun 05, 2023 | 6:27 PM

ಬೆಂಗಳೂರು: ಹಳೇ ಗಾಯಕ್ಕೆ ಹೊಸ ಪೆಟ್ಟು ಬಿದ್ದಿದೆ. ತಣ್ಣಗಿದ್ದ ರಾಜ್ಯ ರಾಜಕಾರಣದಲ್ಲಿ ಗೋಹತ್ಯೆ ನಿಷೇಧದ ಕಾಯ್ದೆ ವಾಪಸ್ (Anti-Cow Slaughter Act) ಕಿಚ್ಚು ಹೊತ್ತಿಸಿದೆ. ಪಶುಸಂಗೋಪನ ಸಚಿವ ಕೆ. ವೆಂಕಟೇಶ್​ ನೀಡಿದ ಹೇಳಿಕೆ ಸದ್ಯ ರಾಜಕೀಯ ಅಂಗಳದಲ್ಲಿ ಚರ್ಚೆಯ ವಿಷಯವಾಗಿದೆ. ಬಿಜೆಪಿ ನಾಯಕರು ಉರಿದುರಿದು ಬೀಳುತ್ತಿದ್ದು, ವಾಗ್ಯುದ್ಧಕ್ಕೆ ದೊಡ್ಡ ವೇದಿಕೆ ಸಿಕ್ಕಂತಾಗಿದೆ. ಸಚಿವ ಕೆ. ವೆಂಕಟೇಶ್​ ಹೇಳಿಕೆಗೆ ಪ್ರತಿಯೊಬ್ಬರು ತಿರುಗೇಟು ನೀಡುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿದೆ.

ಜನರ ಭಾವನೆಗೆ ಧಕ್ಕೆ ಆರೋಪ

ಹಾಸನದಲ್ಲಿ ಬಿಜೆಪಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್​ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಗೋಹತ್ಯೆ ನಿಷೇಧ ರದ್ದು ಮೂಲಕ ಬಹುಜನರ ಭಾವನೆಗೆ ಧಕ್ಕೆ ಆರೋಪ ಮಾಡಲಾಗಿದೆ. ಕೂಡಲೇ ಗೋಹತ್ಯೆ ನಿಷೇಧ ಕಾಯಿದೆ ರದ್ದು ಮಾಡೋ ನಿರ್ಧಾರ ಕೈಬಿಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇದು ಹಿಂದೂ ವಿರೋಧಿ ನೀತಿ

ಸಂಸದ ಶಿವಕುಮಾರ್ ಉದಾಸಿ ಹಾಗೂ ಬಿಜೆಪಿ ಜಿಲ್ಲಾಧ್ಯಕರ ನೇತೃತ್ವದಲ್ಲಿ ಹಾವೇರಿ ನಗರದ ಸಿದ್ದಪ್ಪ ಸರ್ಕಲ್​ನಲ್ಲಿ ಕಾಂಗ್ರೆಸ್​ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ಸು ಮಾಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಇದು ಸರಿಯಾದ ನಿರ್ಧಾರವಲ್ಲ. ಈ ಕಾಯ್ದೆ ರದ್ದು ಮಾಡುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಬಾರದು. ಇದು ಹಿಂದೂ ವಿರೋಧಿ ನೀತಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದರ ಜೊತೆಗೆ ವಿದ್ಯುತ್ ದರ ಕೂಡಾ ಏರಿಕೆ ಮಾಡಿದ್ದೀರಿ. ಜನ ಸಾಮಾನ್ಯರು ಏನಾಗಬೇಕು ಎಂದು ಘೋಷಣೆ ಹಾಕಲಾಗಿದೆ. ಜನ ಹಾಗೂ ಹಿಂದೂ ವಿರೋಧಿ ನೀತಿಯನ್ನು ಹಿಂಪಡೆಯದಿದ್ದರೆ, ಮುಂದೆ ಮತ್ತಷ್ಟು ಉಗ್ರವಾದ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿಲಾಗಿದೆ.

ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರದಲ್ಲಿಯೂ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಮಾಡಿದ್ದು, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್, ವಿದ್ಯುತ್ ದರ ಹೆಚ್ಚಳ ಹಾಗೂ ರೈತರಿಗೆ ಹಾಲಿನ ಪ್ರೋತ್ಸಾಹ ಧನ‌ ಕಡಿಮೆ ಮಾಡಿರುವ ಹಿನ್ನೆಲೆ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.

ಸಿಎಂ, ಡಿಸಿಎಂ ವಿರುದ್ದ ಘೋಷಣೆ ಕೂಗಿ ಆಕ್ರೋಶ

ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ದ ಜಿ.ಪಂ ಕಚೇರಿ ಮುಂಭಾಗ ಬಿಜೆಪಿ ಪ್ರತಿಭಟನೆ ಮಾಡಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಮುಂದುವರಿಸಿ, ವಿದ್ಯುತ್ ದರ ಏರಕೆ ಮಾಡಬೇಡಿ ಮತ್ತು ಹಾಲಿನ ಪ್ರೋತ್ಸಾಹ ಧನ ಕಡಿತಕ್ಕೆ ಮಾಡಿದಕ್ಕೆ ವಿರೋಧ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us