DK Shivakumar: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ ನಿರಾಳ

|

Updated on: Apr 06, 2023 | 5:33 PM

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊಂಚ​ ನಿರಾಳರಾಗಿದ್ದಾರೆ. ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಏಪ್ರಿಲ್‌ 13ರವರೆಗೆ ವಿಸ್ತರಿಸಿದೆ.

DK Shivakumar: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ ನಿರಾಳ
ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಇದ್ದ ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್
Follow us on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ (CBI Investigation) ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (High Court Of Karnataka), ತನಿಖೆಗೆ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಏಪ್ರಿಲ್‌ 13ರವರೆಗೆ ವಿಸ್ತರಿಸಿದೆ. ಸಿಬಿಐ ತನಿಖೆಗೆ ಅನುಮತಿ ಹಾಗೂ ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್​ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಸದ್ಯ ವಿಚಾರಣೆ ನಡೆಸಿದ ಕೋರ್ಟ್ ಎರಡೂ ಅರ್ಜಿಗಳ ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿದೆ. ಸದ್ಯ ಡಿಕೆ ಶಿವಕುಮಾರ್ ಅವರು ನಿರಾಳರಾಗಿದ್ದಾರೆ.

ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆ.24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ತನಿಖಾಧಿಕಾರಿ ತನಿಖೆಯ ಪ್ರಗತಿ ವರದಿ ಹಾಜರುಪಡಿಸಲಿ. ಫೆಬ್ರವರಿ 24ರ ಒಳಗೆ ತನಿಖೆ ವರದಿ ಸಲ್ಲಿಸಲಿ. ಅಲ್ಲಿಯವರೆಗೆ ತನಿಖೆ ಮುಂದುವರಿಸದಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಬಳಿಕ ನಡೆದ ವಿಚಾರಣೆ ವೇಳೆ ಕೋರ್ಟ್, ತಡೆಯಾಜ್ಞೆಯನ್ನು ಮತ್ತೊಮ್ಮೆ ವಿಸ್ತರಿಸಿತ್ತು.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಜಮೀರ್ ಅಹ್ಮದ್​ಗೆ ಹೈಕೋರ್ಟ್​​ನಲ್ಲಿ ಹಿನ್ನಡೆ

ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠಕ್ಕೆ ಬೇರೊಂದು ಪೀಠದಲ್ಲಿದ್ದ ಅರ್ಜಿಯನ್ನು ವರ್ಗಾಯಿಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಈ ಬಗ್ಗೆ ನಡೆದ ವಾದ ಪ್ರತಿವಾದದ ನಂತರ ಅರ್ಜಿದಾರರ ಪರ ವಕೀಲರು ಮಧ್ಯಂತರ ತಡೆಯಾಜ್ಞೆ ಮುಂದುವರಿಸಬೇಕು ಎಂದು ಮನವಿ ಮಾಡಿದರು. ಇವರ ಕೋರಿಕೆಯಂತೆ ಪೀಠವು, ಮಾರ್ಚ್‌ 31ಕ್ಕೆ ಅರ್ಜಿ ವಿಚಾರನೆ ಮುಂದೂಡಿ ಆದೇಶಿಸಿತ್ತು.

ಮಾರ್ಚ್ 31ರಂದು ನಡೆದ ವಿಚಾರಣೆ ವೇಳೆ ಸಿಬಿಐ ತನಿಖೆಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿರುವ ಶಿವಕುಮಾರ್ ಅವರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ವಕೀಲರು ಮನವಿ ಮಾಡಿದ್ದರು. ಆರಂಭದಲ್ಲಿ ಅಸಮಾಧಾನ ಹೊರಹಾಕಿದ್ದ ಕೋರ್ಟ್, ನಂತರ ಏಪ್ರಿಲ್ 6ರ ವರೆಗೆ  ಆಕ್ಷೇಪಣೆ ಸಲ್ಲಿಸಲು ಕಾಲವಕಾಶ ನೀಡಿ  ಆದೇಶಿಸಿತ್ತು. ಅದರಂತೆ ಇಂದು ನಡೆದ ವಿಚಾರಣೆ ವೇಳೆ ಮತ್ತೊಮ್ಮೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Thu, 6 April 23