Bengaluru-Mysuru Expressway: ಬೆಂಗಳೂರು-ಮೈಸೂರು ಹೆದ್ದಾರಿ ಕ್ರೆಡಿಟ್ ಕಾಂಗ್ರೆಸ್​ ಸರ್ಕಾರಕ್ಕೆ ಸಲ್ಲಬೇಕು: ಸಿದ್ದರಾಮಯ್ಯ

ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್ ತಣ್ಣಗಾದ ಬೆನ್ನಲ್ಲೇ ಇದೀಗ ಬೆಂಗಳೂರು-ಮೈಸೂರು ಹೆದ್ದಾರಿ ಕ್ರೆಡಿಟ್ ವಾರ್ ಆರಂಭಗೊಂಡಿದೆ. ದಶಪಥ ರಸ್ತೆ ಕ್ರೆಡಿಟ್ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇವರ ಹೇಳಿಕೆಗೆ ಪ್ರತಾಪ್ ಸಿಂಹ, ವಿಜಯೇಂದ್ರ ಹಾಗೂ ಸುಧಾಕರ್​ ಅವರು ತಿರುಗೇಟು ನೀಡಿದ್ದಾರೆ.

Bengaluru-Mysuru Expressway: ಬೆಂಗಳೂರು-ಮೈಸೂರು ಹೆದ್ದಾರಿ ಕ್ರೆಡಿಟ್ ಕಾಂಗ್ರೆಸ್​ ಸರ್ಕಾರಕ್ಕೆ ಸಲ್ಲಬೇಕು: ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಪ್ರತಾಪ್ ಸಿಂಹ
Rakesh Nayak Manchi Edited By:

Updated on: Mar 06, 2023 | 9:10 PM

ಮೈಸೂರು: ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ (Belagavi Shivaji Statue) ಸ್ಥಾಪನೆ ಕ್ರೆಡಿಟ್ ವಾರ್ ನಡೆಸಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇದೀಗ ಬೆಂಗಳೂರು-ಮೈಸೂರು ಹೆದ್ದಾರಿ (Bengaluru-Mysuru Expressway) ವಿಚಾರದಲ್ಲಿ ಕ್ರೆಡಿಟ್ ವಾರ್ ಆರಂಭಗೊಂಡಿದೆ. ಮಾರ್ಚ್​ 12ರಂದು ಈ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆಗೊಳಿಸಲಿದ್ದಾರೆ. ಒಂದೊಮ್ಮೆ ಎಸ್​ಪಿಜಿ (SPG) ಅನುಮತಿ ಕೊಟ್ಟರೆ ಇದೇ ಹೈವೇಯಲ್ಲಿ ಮೋದಿ ರೋಡ್ ಶೋ (PM Modi Road Show) ಕೂಡ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಕಾಂಗ್ರೆಸ್ (Congress) ಹೈವೇ ಪರಿಶೀಲಿಸಲು ಮುಂದಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾಹಿತಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇದರಲ್ಲಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಸರ್ಕಾರದ ಯಾವ ಪಾತ್ರವೂ ಇಲ್ಲ. ಪ್ರತಾಪ್​​ ಸಿಂಹ ಕ್ಷೇತ್ರದ ವ್ಯಾಪ್ತಿಗೆ ಕೆಲವೇ ಕಲವು ಕಿ.ಮೀ ಮಾತ್ರ ಸೇರುತ್ತದೆ. ಆದರೂ ನಾನು ಮಾಡಿಸಿದ್ದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹೆಚ್​​.ಸಿ.ಮಹದೇವಪ್ಪಗೂ ಈ ರಸ್ತೆಯ ಎಲ್ಲಾ ಮಾಹಿತಿ ಗೊತ್ತಿದೆ. ಮಾ.9ರಂದು ಬೆಂಗಳೂರು-ಮೈಸೂರು ಹೈವೇ ಪರಿಶೀಲನೆ ಮಾಡುತ್ತೇವೆ ಎಂದರು.

ನಮ್ಮಿಂದ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣ

ದಶಪಥ ರಸ್ತೆಯ ಕ್ರೆಡಿಟ್ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಬೇಕು ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ನಮ್ಮಿಂದ ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣಗೊಂಡಿದೆ. ವಿನಾಕಾರಣ ಸಿದ್ದರಾಮಯ್ಯ ಈ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ. 2 ತಿಂಗಳ ಕಾಯಿರಿ, ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಅಂತ್ಯವಾಗುತ್ತದೆ. ಅವರು ಚುನಾವಣೆಯಲ್ಲಿ ಸೋತು ಮನೆಗೆ ಹೋಗುತ್ತಾರೆ. ನಂತರ ಅವರು ಪ್ರವಾಸ ಮಾಡಲಿ. ಮಕ್ಕಳು, ಮೊಮ್ಮಕ್ಕಳ ಜತೆ ಬೆಂಗಳೂರು-ಮೈಸೂರು ಟ್ರಿಪ್ ಮಾಡಲಿ ಎಂದರು.

ಇದನ್ನೂ ಓದಿ: ಆಸ್ಪತ್ರೆಯಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಡಿಸ್ಚಾರ್ಜ್, ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ರೋಡ್​ ಶೋಗೆ ರೆಡಿ

ಸಿದ್ದರಾಮಯ್ಯ ಹೇಳಿಕೆಗೆ ವಿಜಯೇಂದ್ರ ತಿರುಗೇಟು

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ‘ಕೈ’ ಅವಧಿಯಲ್ಲಿ ಆಗಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇಂತಹ ಸುಳ್ಳು ಸಿದ್ದರಾಮಯ್ಯ ಬಾಯಲ್ಲಿ ಬರುತ್ತಿರುವುದು ಹೊಸದಲ್ಲ ಎಂದರು. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಪ್ರಧಾನಿ ಮೋದಿ ಕೊಟ್ಟ ಅಕ್ಕಿ ಚೀಲದ ಮೇಲೆ ಫೋಟೋ ಹಾಕಿಸಿಕೊಂಡಿದ್ದರು. ಆ ಮೂಲಕ ನಾವೇ ಕೊಟ್ಟಿದ್ದು ಎಂದು ಸಿದ್ದರಾಮಯ್ಯ ಫೋಟೋ ಹಾಕಿಕೊಂಡು ರಾಜ್ಯದ ತುಂಬ ಪ್ರಚಾರ ಮಾಡುವ ಪ್ರಯತ್ನ ಮಾಡಿದ್ದರು. ಆಗ ಮತದಾರರು ಕಾಂಗ್ರೆಸ್ ಧಿಕ್ಕರಿಸಿ ಬಿಜೆಪಿಗೆ ಅಧಿಕಾರ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಏನೇ ಅಭಿವೃದ್ಧಿಯಾಗಿದ್ದರೂ ಅವರೇ ಮಾಡಿದ್ದು: ಸುಧಾಕರ್ ವ್ಯಂಗ್ಯ

ಹೈವೇ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು ಎಂದ ಸಿದ್ದರಾಮಯ್ಯ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರು-ಮೈಸೂರು ಹೈವೇ ಕಾಮಗಾರಿ 9 ವರ್ಷಗಳಿಂದ ನಡೆಯುತ್ತಿದೆ. ಮೋದಿಯವರು ಯಾವಾಗಿನಿಂದ ಪ್ರಧಾನಿಯಾಗಿದ್ದಾರೆಂದು ಕಾಂಗ್ರೆಸ್​ನವರು ತಿಳಿದುಕೊಳ್ಳಲಿ ಎಂದರು. ಅಲ್ಲದೆ, ರಾಜ್ಯದಲ್ಲಿ ಏನೇ ಅಭಿವೃದ್ಧಿಯಾಗಿದ್ದರೂ ಅವರೇ ಮಾಡಿದ್ದು ಎಂದು ವ್ಯಂಗ್ಯವಾಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Mon, 6 March 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us